ವರ್ಷದ ನಂತರ ಟಿ20 ತಂಡಕ್ಕೆ ರೈನಾ ಪುನರಾಗಮನ
Team Udayavani, Jan 29, 2018, 6:55 AM IST
ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಫೆ.18 ರಿಂದ ಆರಂಭವಾಗಲಿರುವ ಮೂರು ಟಿ20 ಪಂದ್ಯಗಳ ಸರಣಿಗೆ 16 ಆಟಗಾರರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಸುರೇಶ್ ರೈನಾ ಒಂದು ವರ್ಷದ ನಂತರ ರಾಷ್ಟ್ರೀಯ ತಂಡಕ್ಕೆ ಪುನರಾಗಮನವಾಗಿದ್ದಾರೆ.
ರೈನಾ ಕಳೆದ ವರ್ಷ ಫೆಬ್ರವರಿಯಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಆ ನಂತರ ಫಿಟೆಸ್ ಸಮಸ್ಯೆಯಿಂದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. ಆದರೆ ಇತ್ತೀಚೆಗೆ ನಡೆದ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ರೈನಾ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಯೋ ಯೋ ಟೆಸ್ಟ್ನಲ್ಲಿಯೂ ಪಾಸ್ ಆಗಿದ್ದರು. ಹೀಗಾಗಿ ಪುನಃ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಸಿಕ್ಕಿದೆ.
ಕೊಹ್ಲಿ ನಾಯಕ, ರೋಹಿತ್ ಉಪನಾಯಕ:
ಕಳೆದ ಶ್ರೀಲಂಕಾ ವಿರುದ್ಧದ ಸರಣಿಯ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ವಿಶ್ರಾಂತಿಯಲ್ಲಿರುವ ಕಾರಣ ರೋಹಿತ್ ಶರ್ಮ ತಂಡವನ್ನು ಮುನ್ನಡೆಸಿದ್ದರು. ಇದೀಗ ಕೊಹ್ಲಿ ಮತ್ತೆ ಟಿ20 ತಂಡಕ್ಕೆ ಆಗಮಿಸಿ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮ ಉಪನಾಯಕನ ಸ್ಥಾನ ನಿರ್ವಹಿಸಲಿದ್ದಾರೆ. ಉಳಿದಂತೆ ಲಂಕಾ ವಿರುದ್ಧ ಆಡದ ಭುವನೇಶ್ವರ್ ಕುಮಾರ್ ಮತ್ತು ಶಿಖರ್ ಧವನ್ ಕೂಡ ತಂಡಕ್ಕೆ ವಾಪಸ್ ಆಗಿದ್ದಾರೆ. ವೇಗಿ ಜಯದೇವ್ ಉನಾಡ್ಕಟ್ ಸ್ಥಾನ ಉಳಿಸಿಕೊಂಡಿದ್ದಾರೆ.
ಇಬ್ಬರು ಕನ್ನಡಿಗರಿಗೆ ಸ್ಥಾನ:
ಪ್ರಕಟಗೊಂಡಿರುವ ಭಾರತ ತಂಡದಲ್ಲಿ ಇಬ್ಬರು ಕನ್ನಡಿಗರು ಸ್ಥಾನ ಪಡೆದಿದ್ದಾರೆ. ಆರಂಭಿಕ ಬ್ಯಾಟ್ಸ್ಮನ್ ಕೆ.ಆಲ್.ರಾಹುಲ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಮನೀಷ್ ಪಾಂಡೆ ಆಯ್ಕೆಯಾದ ಕನ್ನಡಿಗರಾಗಿದ್ದಾರೆ.
ಶಮಿ, ಹೂಡಾ, ಸುಂದರ್, ಥಾಂಪಿ ಔಟ್:
ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಆಡಿದ ಮೊಹಮ್ಮದ್ ಶಮಿ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಬಸಿಲ್ ಥಾಂಪಿ ಸ್ಥಾನ ಕಳೆದುಕೊಂಡಿದ್ದಾರೆ.
ಭಾರತ ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಸುರೇಶ್ ರೈನಾ, ಎಂ.ಎಸ್.ಧೋನಿ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಮನೀಷ್ ಪಾಂಡೆ, ಅಕ್ಷರ್ ಪಟೇಲ್, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಜಯದೇವ್ ಉನಾಡ್ಕಟ್, ಶಾದೂಲ್ ಠಾಕೂರ್.