ಉಡುಪಿ: ವಾಲಿಬಾಲ್ ಪಂದ್ಯಾಟ ಉದ್ಘಾಟನೆ
Team Udayavani, Mar 7, 2018, 6:00 AM IST
ಉಡುಪಿ: ಮಂಗಳೂರು ವಿ.ವಿ. ಮತ್ತು ಉಡುಪಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟ (ಸೌಕೂರು ಅಂತಯ್ಯ ಶೆಟ್ಟಿ ಸ್ಮಾರಕ ಟ್ರೋಫಿ)ದ ಉದ್ಘಾಟನೆ ಸಮಾರಂಭವು ಪೂರ್ಣಪ್ರಜ್ಞ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಿತು.
ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು. ಸಚಿವ ಪ್ರಮೋದ್ ಮಧ್ವರಾಜ್ ಅವರು ಪಂದ್ಯಾಟವನ್ನು ಬಲೂನ್ ಹಾರಿಸುವುದರ ಮೂಲಕ ಉದ್ಘಾಟಿಸಿದರು. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ, ನ್ಯಾಯವಾದಿ ಸುಪ್ರಸಾದ್ ಶೆಟ್ಟಿ ಅವರು ಕ್ರೀಡಾಂಗಣವನ್ನು ಉದ್ಘಾಟಿಸಿದರು.
ಸಂಧ್ಯಾ ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ, ನ್ಯಾಯವಾದಿ ಪ್ರದೀಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ನಿವೃತ್ತ ನಿರ್ದೇಶಕ ಎಂ.ಆರ್. ಹೆಗಡೆ, ಮಂಗಳೂರು ವಿ.ವಿ. ದೈ.ಶಿ. ನಿರ್ದೇಶಕ ಡಾ| ಕಿಶೋರ್ ಕುಮಾರ್ ಸಿ.ಕೆ., ದೈ.ಶಿ. ನಿರ್ದೇಶಕ ಮಂಜುನಾಥ ಜೋಗಿ ಉಪಸ್ಥಿತರಿದ್ದರು.
ಸಚಿವ ಪ್ರಮೋದ್ ಮಧ್ವರಾಜ್ ಮತ್ತು ರಾಷ್ಟ್ರೀಯ ಚೆಸ್ ಕ್ರೀಡಾಪಟು ದೇವಿದಾಸ್ ಪೈ ಅವರನ್ನು ಶ್ರೀಪಾದರು ಗೌರವಿಸಿದರು. ಪ್ರಾಂಶುಪಾಲೆ ಡಾ| ಸುಕನ್ಯಾ ಮೇರಿ ಜೆ. ಸ್ವಾಗತಿಸಿ, ಸತೀಶ್ ಶೆಟ್ಟಿ ಚಿತ್ರಪಾಡಿ ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕ ರಮಾನಂದ ರಾವ್ ವಂದಿಸಿದರು.