ಏಪ್ರಿಲ್ 30ರಿಂದ ಮೂರು ದಿನ ಮಳೆ ಸಾಧ್ಯತೆ
Team Udayavani, Apr 25, 2019, 3:29 AM IST
ಬೆಂಗಳೂರು: ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಲಿರುವ ಚಂಡಮಾರುತದ ಪರಿಣಾಮ ರಾಜ್ಯದ ಮೇಲೆ ಬೀರಲಿದ್ದು, ಏಪ್ರಿಲ್ 30ರಿಂದ ಮೂರು ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಎರಡು ದಿನಗಳಿಂದ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ಚಂಡಮಾರುತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನ ಮೇಲೆ ಹೆಚ್ಚಾಗಿರುತ್ತದೆ ಎಂದು ಈ ಹಿಂದೆ ಅಂದಾಜಿಸಲಾಗಿತ್ತು. ಆದರೆ, ಬುಧವಾರ ಅದು ದಿಕ್ಕು ಬದಲಿಸಿದ್ದರಿಂದ ರಾಜ್ಯದ ಮೇಲೆ ಹೆಚ್ಚಿನ ಪರಿಣಾಮ ಇರುವುದಿಲ್ಲ. ಆದರೂ, ಏ.30ರಿಂದ ಮೂರು ದಿನ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಹಲವೆಡೆ ಮಳೆಯಾಗಲಿದೆ ಎಂದು ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದರು.
ರಾಜ್ಯದ ಕರಾವಳಿ ಭಾಗದಲ್ಲಿ ಉಂಟಾಗಿದ್ದ ಕಡಿಮೆ ಒತ್ತಡದ ತಗ್ಗು (ಟ್ರಫ್) ಹಾಗೂ ಮೇಲ್ಮೆ„ ಸುಳಿಗಾಳಿಯ ತೀವ್ರತೆ ಕಡಿಮೆಯಾಗಿದ್ದು, ಬುಧವಾರ ಮಲೆನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಇನ್ನೂ ಎರಡು ದಿನ ದಕ್ಷಿಣ ಒಳನಾಡಿನ ಕೆಲವಡೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದರು.
ಬುಧವಾರ ದಕ್ಷಿಣ ಕನ್ನಡದಲ್ಲಿ 19.50, ಧಾರವಾಡ 5.50 ಹಾಗೂ ಕೊಡಗಿನಲ್ಲಿ 4.50 ಮಿ.ಮೀ. ಮಳೆಯಾಗಿದೆ. ಉಳಿದಂತೆ ಬೀದರ್, ಉತ್ತರ ಕನ್ನಡ, ಮೈಸೂರು, ಚಿಕ್ಕಬಳ್ಳಾಪುರದಲ್ಲಿ 1.50, ಕಲಬುರಗಿ, ಬೆಂಗಳೂರು, ತುಮಕೂರಿನಲ್ಲಿ ತಲಾ ಒಂದು ಮಿ.ಮೀ.ಮಳೆಯಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.