ಕೇಂದ್ರದಲ್ಲಿ ಬಿಜೆಪಿಗೆ ಇನ್ನೂ 50 ವರ್ಷ ಅಧಿಕಾರ: ಜಮಾಲ್ ಸಿದ್ದಿಕಿ ವಿಶ್ವಾಸ
ಬಿಜೆಪಿ ಸರ್ವಸ್ಪರ್ಶಿ, ಅಲ್ಪಸಂಖ್ಯಾತರ ವಿರೋಧಿ ಎನ್ನುವುದು ತಪ್ಪು ಮಾಹಿತಿ
Team Udayavani, Jun 4, 2022, 4:02 PM IST
ಬೆಂಗಳೂರು: ಬಿಜೆಪಿ ಸರ್ವಸ್ಪರ್ಶಿ ಸರ್ವವ್ಯಾಪಿ ಮತ್ತು ಸರ್ವರ ಅಭಿವೃದ್ಧಿಗೆ ಯತ್ನಿಸುವ ಪಕ್ಷ ಎಂದು ತಿಳಿಸುವ ಮೂಲಕ ಅದು ಅಲ್ಪಸಂಖ್ಯಾತರ ವಿರೋಧಿ ಎಂಬ ತಪ್ಪು ಮಾಹಿತಿಯನ್ನು ದೂರಮಾಡಲು ಮೋರ್ಚಾ ಯತ್ನಿಸಬೇಕಿದೆ. ಈ ಮೂಲಕ ಸಬ್ ಕಾ ವಿಕಾಸ್ ಚಿಂತನೆಯನ್ನು ಸಾಕಾರಗೊಳಿಸಬೇಕಿದೆ ಎಂದು ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ ಹೇಳಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಶನಿವಾರ ನಡೆದ ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರಕಾರ ಮಾಡಿದ ಉತ್ತಮ ಕಾರ್ಯಗಳಿಂದಾಗಿ ಬಿಜೆಪಿ ಇನ್ನೂ 50 ವರ್ಷ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆದರೆ, ಕೇಂದ್ರದ ಸರ್ವತೋಮುಖ ಅಭಿವೃದ್ಧಿ ಕಾರ್ಯಗಳ ಕುರಿತು ನಾವು ಜನರಿಗೆ ತಿಳಿಸುವ ಅಗತ್ಯವಿದೆ ಎಂದರು.
ಬಿಜೆಪಿ ದೇಶದ ಮಾತ್ರವಲ್ಲ, ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ. ಬಿಜೆಪಿಯಲ್ಲಿ ವಿಶ್ವಕ್ಕೇ ನೇತೃತ್ವ ನೀಡಬಲ್ಲ ಮಹಾನ್ ನಾಯಕ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಇದೆ. ಈ ಪಕ್ಷದಡಿ ಮೋರ್ಚಾದ ಪದಾಧಿಕಾರಿಗಳಾದ ನಾವೆಲ್ಲರೂ ಧನ್ಯತಾ ಭಾವವನ್ನು ಹೊಂದಿರಬೇಕು ಎಂದು ತಿಳಿಸಿದರು.
ಮೋದಿಯವರ ಸರಕಾರ ಕಳೆದ 8 ವರ್ಷಗಳಲ್ಲಿ ಬಡವರ ಸೇವೆ, ಸುಶಾಸನ ಮತ್ತು ಬಡವರ ಏಳಿಗೆಗಾಗಿ ನಿರಂತರ ಕಾರ್ಯನಿರ್ವಹಿಸಿದೆ. ಭ್ರಷ್ಟಾಚಾರರಹಿತವಾಗಿ ಅದು ಕೆಲಸ ಮಾಡಿದೆ. ಆದರೆ, ವಿರೋಧ ಪಕ್ಷದವರು ಕುರ್ಚಿಗಾಗಿ ಏನನ್ನು ಮಾಡಲೂ ಸಿದ್ಧರಿದ್ದಾರೆ ಎಂದು ಆರೋಪಿಸಿದರು.
ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರನ್ನು ಸಮಾನವಾಗಿ ನೋಡುವ ಬಿಜೆಪಿ ಸರಕಾರ ಕೇಂದ್ರದ್ದು. ಕ್ರಿಶ್ಚಿಯನ್, ಮುಸ್ಲಿಮರು ಹೆಚ್ಚು ಸಂಖ್ಯೆಯಲ್ಲಿ ಇರುವ ಕಡೆ ವಿದ್ಯುತ್, ಮನೆ ಮತ್ತು ರಸ್ತೆ ಸಂಪರ್ಕ ನೀಡುವುದಿಲ್ಲ ಎಂಬ ಮಾತು ಯಾವತ್ತೂ ಬಂದಿಲ್ಲ ಎಂದು ಅವರು ನುಡಿದರು.
ರೈತರಿಗೆ ನೆರವಾಗುವ ಕಿಸಾನ್ ಸಮ್ಮಾನ್ ಯೋಜನೆಯನ್ನು ಬಿಜೆಪಿ ಸರಕಾರ ಜಾರಿಗೊಳಿಸಿದೆ. ಯಾವುದೇ ಯೋಜನೆಗಳಲ್ಲಿ ಭೇದಭಾವ ಅಲ್ಲಿಲ್ಲ. “ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್” ಘೋಷಣೆಯಂತೆ ಕೇಂದ್ರ ಸರಕಾರ ಕೆಲಸ ಮಾಡುತ್ತಿದೆ. ನಾವು ಸಮಾಜದ ಎಲ್ಲರಿಗೂ ಯೋಜನೆಗಳ ಪ್ರಯೋಜನ ತಲುಪುವಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಸಮಾಜದ ಎಲ್ಲರಿಗೆ, ಎಲ್ಲ ವರ್ಗದವರಿಗೆ ಮತ್ತು ಎಲ್ಲ ಧರ್ಮದವರಿಗೆ ಒಳಿತನ್ನು ಉಂಟು ಮಾಡುವ ಚಿಂತನೆಯನ್ನು ಬಿಜೆಪಿ ಅನುಷ್ಠಾನಕ್ಕೆ ತರುತ್ತಿದೆ. ದೇಶದೆಲ್ಲೆಡೆ ಅಲ್ಪಸಂಖ್ಯಾತರ ಮೋರ್ಚಾವು ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದರು.
ರಾಜ್ಯ ಅಧ್ಯಕ್ಷ ಸೈಯದ್ ಸಲಾಂ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಮುಂದೆ ಅವರು ರಾಷ್ಟ್ರೀಯ ಅಧ್ಯಕ್ಷ ಆಗಲಿ ಎಂದು ಆಶಿಸಿದರು. ಬಿಜೆಪಿ ಇಂಥ ಕನಸುಗಳಿಗೆ ಅವಕಾಶ ಮಾಡಿಕೊಡುತ್ತದೆ. ಅದು ನನಸಾಗಲೂ ಅವಕಾಶವಿದೆ. ಆದರೆ, ಕುಟುಂಬ ರಾಜಕಾರಣ ಮಾಡುವ ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ಇಂಥ ಕನಸು ಕಾಣಲು ಸಾಧ್ಯವಿಲ್ಲ ಎಂದು ಅವರು ನುಡಿದರು.
ಮೋರ್ಚಾವನ್ನು ಹೆಚ್ಚು ಸದೃಢಗೊಳಿಸಲು ಪೂರ್ವಾಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳೂ ದುಡಿದಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಜನಸಂಘದ ಪದಾಧಿಕಾರಿಗಳನ್ನು ಹಿಂದೆ ತಮಾಷೆ ಮಾಡುವ ದಿನಗಳಿದ್ದವು. ಆದರೆ, ಈಗ ಕಾಲ ಬದಲಾಗಿದೆ ಎಂದು ನುಡಿದರು.
ಪಕ್ಷವನ್ನು ಬಲಪಡಿಸಲು ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳಬೇಕು. ವಾಟ್ಸಪ್, ಫೇಸ್ ಬುಕ್, ಟ್ವಿಟರ್ ಮತ್ತಿತರ ಸಾಮಾಜಿಕ ಜಾಲತಾಣ, ಮುದ್ರಣ ಮಾಧ್ಯಮವನ್ನು ಪ್ರಚಾರಕಾರ್ಯಕ್ಕೆ ಬಳಸಿಕೊಳ್ಳಿ ಎಂದು ಅವರು ಮನವಿ ಮಾಡಿದರು. ಮತದಾರರನ್ನು ತಲುಪಲು ಮತ್ತು ಮುಖಂಡರಿಗೆ ವಿಷಯ ತಿಳಿಸಲು ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆ ಅತ್ಯಗತ್ಯ ಎಂದು ವಿವರಿಸಿದರು.
ಅಭಿವೃದ್ಧಿ ವಿಷಯದಲ್ಲಿ ಬಿಜೆಪಿಗೆ ಜಾತಿ, ಮತ ಮತ್ತು ಧರ್ಮದ ಭೇದವಿಲ್ಲ. ಈ ವಿಚಾರದಲ್ಲಿ ಯಾರಾದರೂ ತಪ್ಪು ಮಾಹಿತಿ ನೀಡಿದರೆ ಅವರಿಗೆ ಸೂಕ್ತ ಉತ್ತರ ಕೊಡಬೇಕು. ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ|ಅಬ್ದುಲ್ ಸಲಾಂ, ನೋಬಲ್ ಮ್ಯಾಥ್ಯೂ, ಅಲ್ಪಸಂಖ್ಯಾತರ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಅನಿಶ್, ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯ ಅಧ್ಯಕ್ಷ ಸಯದ್ ಸಲಾಂ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಮುಕ್ತಾರ್ ಪಠಾಣ್, ಕರ್ನಾಟಕ ಕ್ರೈಸ್ತ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಶಾಂತಕುಮಾರ್, ಕರ್ನಾಟಕ ರಾಜ್ಯ ಹಜ್ ಮಂಡಳಿ ಅಧ್ಯಕ್ಷ ರವೂಫುದ್ದೀನ್ ಕಚೇರಿವಾಲಾ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?