98 ವಸತಿ ಶಾಲೆ-ನಿಲಯಗಳಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ 784 ಜನ: ಡಿಸಿಎಂ ಕಾರಜೋಳ
Team Udayavani, Apr 16, 2020, 12:13 PM IST
ಬೆಂಗಳೂರು: ಕೋವಿಡ್-19 ವೈರಸ್ ನಿಯಂತ್ರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್ನಲ್ಲಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು.
ಬೆಂಗಳೂರಿನ ಎಂ ಜಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಆಶ್ರಯದಲ್ಲಿರುವವರನ್ನು ಭೇಟಿ ಮಾಡಿ ಮಾತನಾಡಿದ ಅವರು, ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್ ಡೌನ್ನಿಂದ ಬಾದಿತರಾದವರಿಗೆ, ನಿರಾಶ್ರಿತರಿಗೆ, ಅಸಂಘಟಿತ ಕೂಲಿ ಕಾರ್ಮಿಕರಿಗೆ, ಅಲೆಮಾರಿ ಜನಾಂಗದವರಿಗೆ ಹಾಗೂ ಆಶ್ರಯ ಕೋರಿ ಬಂದ ಒಟ್ಟು 5108 ಜನರಿಗೆ ಸಮಾಜ ಇಲಾಖೆಯ ವ್ಯಾಪ್ತಿಯ 92 ವಸತಿ ಶಾಲೆಗಳಲ್ಲಿ ಹಾಗೂ ನಿಲಯಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಯಾರೂ ಅನ್ನ, ನೀರು ದೊರಕದೇ ಬಳಲಬಾರದು ಎನ್ನುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶಯವಾಗಿದ್ದು, ಇದಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಅದಕ್ಕೆ ಪೂರಕವಾಗಿ ಸಮಾಜ ಕಲ್ಯಾಣ ಇಲಾಖೆಯು ಶ್ರಮಿಸುತ್ತಿದೆ ಎಂದರು
ತೊಂದರೆಗೊಳದ ಯಾವುದೇ ಅಂಘಟಿತ ಕಾರ್ಮಿಕರು, ಬೇರೆ ಸ್ಥಳಗಳಿಂದ ಬಂದವರು ಆಶ್ರಯ ಬೇಕಾದರೆ ಅಥವಾ ಯಾವುದೇ ತೊಂದರೆಗಳಿದ್ದರೂ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರನ್ನು ಸಂಪರ್ಕಿಸಿದರೆ ಸಮಸ್ಯೆ ಪರಿಹಾರವಾಗಲಿದೆ. ವಸತಿ ನಿಲಯಗಳ ಆಶ್ರಯದಲ್ಲಿರುವವರಿಗೆ ಪ್ರತಿನಿತ್ಯ ತಿಂಡಿ, ಊಟೋಪಚಾರ ನೀಡಿ, ಆರೈಕೆ ಮಾಡಲಾಗುತ್ತಿದೆ.ಸೂಕ್ತ ವಸತಿ, ಸ್ನಾನಗೃಹ ಸೌಲಭ್ಯ ಒದಗಿಸಿ, ಸಾಬೂನು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ನೀಡಲಾಗಿದೆ. ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ತಾಲೂಕು ವೈದ್ಯಾಧಿಕಾರಿಯೊಂದಿಗೆ ಸೂಕ್ತ ಸಮನ್ವಯ ಸಾಧಿಸಿಕೊಂಡು ವೈದ್ಯಕೀಯ ತಂಡವು ಇವರ ಆರೋಗ್ಯ ತಪಾಸಣೆ ಕೈಗೊಳ್ಳುವಂತೆ ಕ್ರಮಕೈಗೊಳ್ಳಲಾಗಿದೆ. ಈ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿರುವವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಡಿಸಿಎಂ ಅವರ ಆಪ್ತಕಾರ್ಯದರ್ಶಿ ವಿ. ಶ್ರೀನಿವಾಸ ಉಪಸ್ಥಿತರಿದ್ದರು.