ಪಿಯುಸಿ: ಫಲಿತಾಂಶ ತಿರಸ್ಕರಿಸಿದ 878 ಮಂದಿ
Team Udayavani, Aug 4, 2021, 7:10 AM IST
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತೃಪ್ತಿ ಕಾಣದ 850ಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶ ತಿರಸ್ಕರಿಸಿ, ಪರೀಕ್ಷೆ ಬರೆಯಲು ಮುಂದಾಗಿದ್ದಾರೆ.
2020-21ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಿಲ್ಲ. ಬದಲಾಗಿ ಈ ವಿದ್ಯಾರ್ಥಿಗಳ ಎಸೆಸೆಲ್ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ಫಲಿತಾಂಶ ನೀಡಲಾಗಿತ್ತು. ಪ.ಪೂ. ಶಿಕ್ಷಣ ಇಲಾಖೆ ನೀಡಿರುವ ಫಲಿತಾಂಶದಲ್ಲಿ ತೃಪ್ತಿಕಾಣದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸುಮಾರು 878 ವಿದ್ಯಾರ್ಥಿಗಳು ಫಲಿತಾಂಶವನ್ನು ತಿರಸ್ಕರಿಸಿ, ಪರೀಕ್ಷೆ ಬರೆಯಲು ಮುಂದಾಗಿದ್ದಾರೆ ಎಂದು ಪಿಯು ಇಲಾಖೆಯ ಮೂಲಗಳು ತಿಳಿಸಿವೆ.
ಆಗಸ್ಟ್ ಅಂತ್ಯದಲ್ಲಿ ಖಾಸಗಿ ಅಭ್ಯರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಇದೇ ವೇಳೆ ಫಲಿತಾಂಶ ತಿರಸ್ಕರಿಸಿರುವ ಅಭ್ಯರ್ಥಿಗಳಿಗೂ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಪಡೆಯುವ ಅಂಕವೇ ಅಂತಿಮವಾಗಿರುತ್ತದೆ. ಒಂದೊಮ್ಮೆ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೂ ಹಿಂದಿನ ಅಂಕ ಪಡೆಯಲು ಸಾಧ್ಯವಿಲ್ಲ ಎಂದು ಇಲಾಖೆಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದರು.