ಇಬ್ಬರು ಕೆಎಎಸ್ ಅಧಿಕಾರಿಗಳ ವಿರುದ್ಧ ಎಸಿಬಿ ಎಫ್ಐಆರ್
Team Udayavani, May 4, 2022, 6:45 AM IST
ಬೆಂಗಳೂರು: ಬಿಡಿಎ ಸ್ವಾಧೀನ ಪಡಿಸಿಕೊಂಡ ಜಮೀನಿನಲ್ಲಿ ಕೊಳೆಗೇರಿ ನಿವಾಸಿಗಳ ಹೆಸರಿನಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ ಆರೋಪದಡಿ ನಿವೃತ್ತ ಕೆಎಎಸ್ ಅಧಿಕಾರಿ ಎಚ್.ಆರ್. ಜಗದೀಶ್ ಹಾಗೂ ಹಾಲಿ ಕೆಎಎಸ್ ಅಧಿಕಾರಿ ರೂಪಾ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ಬಿಡಿಎ ಉಪಕಾರ್ಯದರ್ಶಿ -2 ಆಗಿದ್ದ ಜಗದೀಶ್ ಹಾಗೂ ಉಪಕಾರ್ಯದರ್ಶಿ-3 ಆಗಿದ್ದ ರೂಪಾ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡ ಜಮೀನು ಗಳಲ್ಲಿದ್ದ ಕೊಳೆಗೇರಿ ನಿವಾಸಿಗಳ ಹೆಸರಿ ನಲ್ಲಿ ಅಕ್ರಮವಾಗಿ ಒಂದಕ್ಕಿಂತ ಹೆಚ್ಚಿನ ನಿವೇಶನಗಳನ್ನು ಹಂಚಿಕೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಈ ಸಂಬಂಧ ಬಂದ ದೂರಿನ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು 2021ರ ನವೆಂಬರ್ 19ರಿಂದ 23ರವರೆಗೆ ಬಿಡಿಎ ಕಚೇರಿಗಳಲ್ಲಿ ಶೋಧ ನಡೆಸಿದ್ದರು. ಅಕ್ರಮ ನಿವೇಶನ ಹಂಚಿಕೆ ಮಾಡಿರುವ ಸಂಬಂಧ ನೂರಾರು ಕಡತಗಳನ್ನು ವಶಪಡಿಸಿಕೊಂಡಿದ್ದರು. ಅವುಗಳ ಪರಿಶೀಲನೆ ನಡೆಸಿದಾಗ ಕೊಳೆಗೇರಿ ನಿವಾಸಿಗಳಿಗೆ ಪರಿಹಾರ ರೂಪದಲ್ಲಿ ನಿವೇಶನ ಹಂಚಿಕೆಯಲ್ಲೂ ಅಕ್ರಮ ನಡೆದಿರುವುದು ಕಂಡುಬಂದಿತ್ತು. ಹಾಗಾಗಿ ಜಗದೀಶ್ ಮತ್ತು ರೂಪಾ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಅನುಮತಿ ಕೋರಿ ಎಸಿಬಿ ರಾಜ್ಯ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಕಳೆದ ಎಪ್ರಿಲ್ 21ರಂದು ಇಬ್ಬರು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಸರಕಾರ ಅನುಮತಿ ನೀಡಿತ್ತು.