ಹೆದ್ದಾರಿ ಬಂದ್ಗೆ ಮಿಶ್ರ ಪ್ರತಿಕ್ರಿಯೆ
Team Udayavani, Sep 26, 2020, 5:51 AM IST
ಬೆಂಗಳೂರು: ಕೇಂದ್ರ, ರಾಜ್ಯ ಸರಕಾರಗಳು ರೈತ ವಿರೋಧಿ ಧೋರಣೆ ಅನುಸರಿಸುತ್ತಿವೆ ಎಂದು ಆರೋಪಿಸಿ ಐಕ್ಯ ಹೋರಾಟ ವೇದಿಕೆ ಕರೆ ನೀಡಿದ್ದ ಹೆದ್ದಾರಿ ಬಂದ್ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ, ಉತ್ತರ ಕರ್ನಾಟಕ ಭಾಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಹಳೆ ಮೈಸೂರು ಭಾಗದಲ್ಲಿ ರೈತರು ಬೀದಿಗಿಳಿದು ಹೆದ್ದಾರಿ ತಡೆ ನಡೆಸಿದರು. ಕರಾವಳಿಯ ಕೆಲವೆಡೆ ರಸ್ತೆ ತಡೆ ನಡೆಯಿತು.
ಮಂಡ್ಯದಲ್ಲಿ ಹೆದ್ದಾರಿ ತಡೆ ನಡೆಸಿದ ರೈತ ಸಂಘಟನೆಗಳ ಕಾರ್ಯಕರ್ತರು, ಭೂಸುಧಾರಣೆ ತಿದ್ದುಪಡಿ ಮಸೂದೆ ಮತ್ತು ಎಪಿಎಂಸಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿದರು. ಮೈಸೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದರು. ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ, ರಾಜಧಾನಿಯಲ್ಲಿ ನೀರಸ ಪ್ರತಿಕ್ರಿಯೆ ಕಂಡುಬಂತು.
ಹಳೆ ಮೈಸೂರು ಭಾಗದಲ್ಲಿ ಉತ್ತಮ ಪ್ರತಿಕ್ರಿಯ ವ್ಯಕ್ತವಾಗಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬಂದ್ ತೀವ್ರತೆ ಇರಲಿಲ್ಲ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಹೇಳಿದರು.
ನಾವು ಹೆದ್ದಾರಿ ಬಂದ್ನಲ್ಲಿ ಭಾಗವಹಿಸಿಲ್ಲ. ಕೇವಲ ಪ್ರತಿಭಟನೆ ನಡೆಸಿದ್ದೇವೆ. ಸೋಮವಾರ ಕೇಂದ್ರ ಮತ್ತು ರಾಜ್ಯ ಸರಕಾರದ ಧೋರಣೆ ಖಂಡಿಸಿ ನಡೆಯುವ ಕರ್ನಾಟಕ ಬಂದ್ನಲ್ಲಿ ಭಾಗವಹಿಸುತ್ತೇವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದರು. ಭೂ ಸುಧಾರಣ ತಿದ್ದುಪಡಿ ಮಸೂದೆ ಕೈಬಿಡುವವರೆಗೂ ಹೋರಾಟ ನಡೆಯ ಲಿದೆ ಎಂದು ಎಚ್ಚರಿಸಿದರು.
ಸಿಎಂ ಸಭೆ ವಿಫಲ
ಪ್ರತಿಭಟನೆ ನಡೆಸುತ್ತಿರುವ ರೈತರ ಜತೆ ಸಿಎಂ ಯಡಿಯೂರಪ್ಪ ನಡೆಸಿದ ಸಂಧಾನಸಭೆ ವಿಫಲವಾಗಿದೆ. ಈ ಎರಡೂ ಮಸೂದೆಗಳನ್ನು ವಾಪಸ್ ಪಡೆಯಬೇಕು ಎಂಬುದು ರೈತ ಮತ್ತು ಕಾರ್ಮಿಕ ಮುಖಂಡರ ಒತ್ತಾಯ. ಸರಕಾರ ಇದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಸಿಎಂ ಸಭೆ ವಿಫಲವಾಗಿದೆ. ಹೀಗಾಗಿ ಸೆ. 28ರಂದು ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ನಡೆಯಲಿದೆ.