ಮತ್ತೆ ಮುನ್ನೆಲೆಗೆ ಬಂದ ಇಂಗ್ಲಿಷ್ ಮಾಧ್ಯಮ ವಿಷಯ
Team Udayavani, Sep 11, 2019, 3:00 AM IST
ಬೆಂಗಳೂರು: ಕನ್ನಡ ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲೇ ಇಂಗ್ಲಿಷ್ ಮಾಧ್ಯಮವಾಗಿ ಕಲಿಕೆ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡ ನಿರ್ಲಕ್ಷ್ಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಈ ಸಂಬಂಧ ನಾಡಿನ ಹಿರಿಯ ಸಾಹಿತಿಗಳು ಮತ್ತು ಕನ್ನಡ ಪರ ಹೋರಾಟಗಾರರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ಕನ್ನಡಪರ ಹೋರಾಟಗಾರರು ಬುಧವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿಗಳ, ಶಿಕ್ಷಣ ತಜ್ಞರ ಮತ್ತು ಕನ್ನಡ ಸಂಘಟನೆಗಳ ಸಮಾಲೋಚನೆ ಸಭೆ ಆಯೋಜಿಸಿದ್ದಾರೆ.
ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ: ಮ.ಗು.ಸದಾನಂದಯ್ಯ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 2.30ಕ್ಕೆ ಸಮಾಲೋಚನಾ ಸಭೆ ನಡೆಯಲಿದೆ. ನಿವೃತ್ತ ನ್ಯಾ.ಎ.ಜೆ.ಸದಾಶಿವ, ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ, ಹಿರಿಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ, ಕವಿ ಸಿದ್ದಲಿಂಗಯ್ಯ, ದೊಡ್ಡರಂಗೇಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ಧರಾಮಯ್ಯ, ಮುಖ್ಯಮಂತ್ರಿ ಚಂದ್ರು, ವಿಮರ್ಶಕ ಡಾ.ಜಿ.ರಾಮಕೃಷ್ಣಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್, ಹಿರಿಯ ಜಾನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ, ಪ್ರೊ.ಚಂಪಾ, ಡಾ.ಎಲ್.ಹನುಮಂತಯ್ಯ, ಬಿ.ಟಿ.ಲಲಿತಾ ನಾಯಕ್ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ.