ಮಾಜಿ ಸಚಿವ ಬಿ.ಎ.ಮೊಹಿದಿನ್ ವಿಧಿವಶ ; ಮಂಗಳೂರಿನಲ್ಲಿ ಅಂತ್ಯಕ್ರಿಯೆ
Team Udayavani, Jul 10, 2018, 10:41 AM IST
ಬೆಂಗಳೂರು: ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ.ಮೊಹಿದಿನ್ ಅವರು ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.
ಜೆ.ಎಚ್.ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಸಣ್ಣ ಕೈಗಾರಿಕೆ ಮತ್ತು ಉನ್ನತ ಶಿಕ್ಷಣ ಖಾತೆಯನ್ನು ನಿರ್ವಹಿಸಿದ್ದರು.
1978ರಲ್ಲಿ ಕಾಂಗ್ರೆಸ್ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಮೊಹಿದಿನ್ ಅವರು ಜನತಾ ದಳ ಸೇರಿದ್ದರು. 2 ಬಾರಿ ಪರಿಷತ್ ಸದಸ್ಯರಾಗಿದ್ದರು. ದಳ ವಿಭಜನೆ ವೇಳೆ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಮೊಹಿದಿನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
11 ಗಂಟೆಯ ವರೆಗೆ ಬೆಂಗಳೂರಿನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ವಿಶೇಷ ಅಂಬುಲೆನ್ಸ್ನಲ್ಲಿ ಪಾರ್ಥೀವ ಶರೀರವನ್ನು ಮಂಗಳೂರಿಗೆ ತಂದು ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ.
ನನ್ನೊಳಗಿನ ನಾನು ಎಂಬ ಆತ್ಮ ಕಥನ ಪುಸ್ತಕವನ್ನು ಮೊಹಿದಿನ್ ಅವರು ಬರೆದಿದ್ದು ಇನ್ನಷ್ಟೆ ಬಿಡುಗಡೆಯಾಗಬೇಕಿದೆ. ಪುಸ್ತಕಕ್ಕೆ ಮಹಮ್ಮದ್ ಕುಳಾಯಿ ಮತ್ತು ಬಿ.ಎ.ಮಹಮದ್ ಅಲಿ ಅವರು ನಿರೂಪಣೆ ಮಾಡಿದ್ದಾರೆ