ಗಣಪತಿ ಕೇಸ್ CBIಗೆ ಒಪ್ಪಿಸಿ, ಸಿಎಂ ಸಿದ್ದು ರಾಜೀನಾಮೆ ಕೊಡಲಿ; BSY
Team Udayavani, Aug 24, 2017, 1:34 PM IST
ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಈ ಕೇಸ್ ಅನ್ನು ಸಿಬಿಐಗೆ ವಹಿಸಬೇಕು, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಗುರುವಾರ ಆಗ್ರಹಿಸಿದ್ದಾರೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಎಫ್ಎಸ್ಎಲ್ ವರದಿ ಚಾನೆಲ್ ವೊಂದರಲ್ಲಿ ಬಹಿರಂಗವಾದ ಬಳಿಕ ಮತ್ತೊಂದು ತಿರುವು ಪಡೆದುಕೊಂಡಿದೆ. ಈ ನಿಟ್ಟಿನಲ್ಲಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಪ್ರಕರಣದ ಬಗ್ಗೆ ಬಿಜೆಪಿ ಮೊದಲೇ ಅನುಮಾನ ವ್ಯಕ್ತಪಡಿಸಿತ್ತು. ಆದರೆ ಗಣಪತಿ ಸಾವಿನ ಪ್ರಕರಣದಲ್ಲಿ ರಾಜ್ಯ ಸರ್ಕಾರ ತನಿಖೆಯ ನಾಟಕ ನಡೆಸಿದೆ. ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸರು ಮತ್ತು ರಾಜ್ಯ ಸರ್ಕಾರ ಸಂಚು ನಡೆಸಿದೆ ಎಂದು ಆರೋಪಿಸಿದರು.
ಸಿಐಡಿ ಮತ್ತು ಎಸಿಬಿಯನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ತನಿಖೆ ನೆಪದಲ್ಲಿ ಸಚಿವ ಕೆಜೆ ಜಾರ್ಜ್ ಗೆ ಕ್ಲೀನ್ ಚಿಟ್ ನೀಡಿದೆ. ಗಣಪತಿ ಅವರ ಸಾವಿನ ಹಿಂದೆ ಕಾಣದ ಕೈಗಳ ಕೈವಾಡ ಇದೆ. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.