ಅತೃಪ್ತರ ನಡೆಯ ಮೇಲೆ ಬಿಜೆಪಿ ನಿಗಾ
Team Udayavani, Dec 24, 2018, 7:55 AM IST
ಬೆಂಗಳೂರು: ಸಂಪುಟ ಪುನಾರಚನೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅತೃಪ್ತರು ಆಕ್ರೋಶ ಹೊರಹಾಕುತ್ತಿರುವ ಹಿನ್ನೆಲೆಯಲ್ಲಿ ಸರಕಾರ ರಚನೆ ಅವಕಾಶದ ನಿರೀಕ್ಷೆಯಲ್ಲಿ ತೆರೆಮರೆಯಲ್ಲೇ ಕಸರತ್ತು ನಡೆಸಿರುವ ಬಿಜೆಪಿಯು ಇನ್ನೊಂದೆಡೆ ಲೋಕಸಭಾ ಚುನಾವಣೆ ಸಿದ್ಧತೆ ಕಾರ್ಯಕ್ಕೂ ಚಾಲನೆ ನೀಡಿದೆ. ಸಚಿವ ಸ್ಥಾನದಿಂದ ಕೈಬಿಟ್ಟ ಬಳಿಕ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಇತರ ಅತೃಪ್ತರ ನಡೆಯನ್ನು ಬಿಜೆಪಿ ನಾಯಕರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಸದ್ಯದಲ್ಲೇ ಆಯ್ದ ಅತೃಪ್ತ ಶಾಸಕರೊಂದಿಗೆ ಗೌಪ್ಯ ಸಭೆ ನಡೆಸಲು ಚಿಂತಿಸಿದ್ದಾರೆ ಎನ್ನಲಾಗಿದ್ದು, ಆ ಸಭೆಯಲ್ಲಿ ಕೈಗೊಳ್ಳುವ ನಿಲುವು ಆಧರಿಸಿ ಕಾರ್ಯತಂತ್ರ ಹೆಣೆಯಲು ಬಿಜೆಪಿ ಸಜ್ಜಾಗಿದೆ.
ಸಂಪುಟ ಪುನಾರಚನೆ ಬಳಿಕ ಸಂಪುಟದಿಂದ ಕೈಬಿಟ್ಟಿರುವ ರಮೇಶ್ ಜಾರಕಿಹೊಳಿ, ಆರ್.ಶಂಕರ್ ತೀವ್ರ ಅಸಮಾಧಾನಗೊಂಡಿದ್ದರೆ, ಸಚಿವ ಸ್ಥಾನದ ಆಕಾಂಕ್ಷಿಗಳು ಕಾಂಗ್ರೆಸ್ ನಾಯಕರ ನಡೆ ಬಗ್ಗೆ ಪ್ರತ್ಯಕ್ಷ, ಪರೋಕ್ಷವಾಗಿ ಅಸಮಾಧಾನ ಹೊರ ಹಾಕುತ್ತಿದ್ದಾರೆ. ರವಿವಾರ ಕಾಂಗ್ರೆಸ್ನ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ, ಶಾಸಕ ಡಾ| ಕೆ.ಸುಧಾಕರ್ ಕೂಡ ಅಸಮಾಧಾನ ಹೊರ ಹಾಕಿದ್ದಾರೆ. ಹಾಗಾಗಿ ಕಾಂಗ್ರೆಸ್ನ ಅತೃಪ್ತ ಶಾಸಕರ ಸಂಖ್ಯೆ ಮತ್ತವರ ಮುಂದಿನ ನಡೆಗೆ ಅನುಗುಣವಾಗಿ ಕಾರ್ಯಾಚರಣೆಗಿಳಿಯಲು ಕಮಲ ಪಕ್ಷ ನಿರ್ಧರಿಸಿದೆ ಎನ್ನಲಾಗಿದೆ.
ಲೋಕಸಭೆ ಚುನಾವಣೆಗೆ ಸಿದ್ಧತೆ
ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಸಿದ್ಧತೆ ಕಾರ್ಯವನ್ನು ಚುರುಕುಗೊಳಿಸಿರುವ ಬಿಜೆಪಿಯು ರಾಜ್ಯದ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಭಿಪ್ರಾಯ ಸಂಗ್ರಹಣೆ ಕಾರ್ಯಕ್ಕೆ ಚಾಲನೆ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ರವಿವಾರ ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಭೆ ನಡೆಯಿತು.
ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಕುರಿತಂತೆ ಸೋಮವಾರ ಸಭೆ ನಡೆಯಲಿದೆ. ಕೇಂದ್ರದಲ್ಲಿ ಸಚಿವರಾಗಿದ್ದ ಅನಂತ ಕುಮಾರ್ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.
ಎಲ್ಲ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಕುರಿತಂತೆ ಅಭಿಪ್ರಾಯ ಸಂಗ್ರಹ ಕಾರ್ಯವನ್ನು 15 ದಿನಗಳೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಒಟ್ಟಾರೆ ಅಭಿಪ್ರಾಯವನ್ನು ವರಿಷ್ಠರಿಗೆ ಸಲ್ಲಿಸಿ, ಅವರ ಸೂಚನೆಯಂತೆ ಮುಂದುವರಿಯಲಾಗುವುದು ಎಂದು ಬಿಜೆಪಿ ಪದಾಧಿಕಾರಿಯೊಬ್ಬರು ತಿಳಿಸಿದರು. ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಯಡಿಯೂರಪ್ಪ ಅವರ ನೇತೃತ್ವದಲ್ಲೇ ಸಿದ್ಧತೆ ಆರಂಭಿಸಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬಿಜೆಪಿಗೆ ಬರುವುದು ಊಹಾಪೋಹ. ಬಿಜೆಪಿಯು ಸದನದ ಒಳಗೆ ಮತ್ತು ಹೊರಗೆ ಪ್ರಬಲ ವಿಪಕ್ಷವಾಗಿ ಕಾರ್ಯ ನಿರ್ವಹಿಸುತ್ತಿದೆ. ಕಾಂಗ್ರೆಸ್ ಪಕ್ಷವು ತನ್ನ ಶಾಸಕರನ್ನು ಸಮಾಧಾನಪಡಿಸಿಕೊಂಡು ಹಿಡಿದಿಟ್ಟುಕೊಳ್ಳಬೇಕು. ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ಸ್ವತಂತ್ರರಾಗಿರುತ್ತಾರೆ. ಆಮೇಲೆ ಯಾರಾದರೂ ಪಕ್ಷಕ್ಕೆ ಬರುವುದಾದರೆ ಸ್ವಾಗತ. ನಾವು ರಮೇಶ್ ಜಾರಕಿಹೊಳಿ ಅವರನ್ನು ಸಂಪರ್ಕಿಸಿಲ್ಲ. ತಾವಾಗಿಯೇ ರಾಜೀನಾಮೆ ಕೊಟ್ಟು ಹೊರ ಬಂದ ಅನಂತರ ಬಿಜೆಪಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಬರುವುದಾದರೆ ಸ್ವಾಗತ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ