ಹಾಸನದಲ್ಲಿ ಜೆಡಿಎಸ್ ವಿರುದ್ಧ ಬಿಜೆಪಿ ಪ್ರತಿಭಟನೆ; ಬಿಗಿ ಬಂದೋಬಸ್ತ್
Team Udayavani, Feb 13, 2019, 10:32 AM IST
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಆಪರೇಷನ್ ಕಮಲ ಆಡಿಯೋದಲ್ಲಿ ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ, ಮಾರಾಮಾರಿ ಘಟನೆ ಖಂಡಿಸಿ ಬಿಜೆಪಿ ಹಾಸನದಲ್ಲಿ ಪ್ರತಿಭಟನೆ ನಡೆಸುತ್ತಿದೆ.
ಪ್ರೀತಂ ಗೌಡ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ದಾಳಿ ನಡೆಸಿದ್ದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಹಾಸನದ ಎಂಜಿ ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏತನ್ಮಧ್ಯೆ ಬಿಜೆಪಿ ಶಾಸಕ ಪ್ರೀತಂ ಗೌಡ ಮನೆಗೆ ಬಿಗಿ ಭದ್ರತೆ ಒದಗಿಸಲಾಗಿದೆ.
ಪ್ರತಿಭಟನೆ ಮಾಡಬೇಡಿ; ಜೆಡಿಎಸ್ ಕಾರ್ಯಕರ್ತರಿಗೆ ಸಿಎಂ
ಶಾಸಕ ಪ್ರೀತಂ ಗೌಡ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಬಾರದು ಎಂದು ಸಿಎಂ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ನನ್ನ ಮಗ ತಪ್ಪು ಮಾಡಿಲ್ಲ; ಪ್ರೀತಂ ಗೌಡ ತಾಯಿ
ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ, ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿದ್ದನ್ನು ಕಂಡು ಗಾಬರಿಯಾಗಿದೆ. ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನಿಗೆ ಗಾಯವಾಗಿದೆ. ಹೀಗಾಗಿ ನಾನು ಆತನನ್ನು ನೋಡಲು ಆಸ್ಪತ್ರೆಗೆ ತೆರಳುತ್ತಿದ್ದೇನೆ. ರಾಜಕೀಯದ ಬಗ್ಗೆ ನಾನು ಮಾತನಾಡಲ್ಲ ಎಂದು ಪ್ರೀತಂಗೌಡ ತಾಯಿ ನಾಗರತ್ನ ಪ್ರತಿಕ್ರಿಯೆ ನೀಡಿದ್ದಾರೆ.