ಉಕ್ರೇನ್ ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಜೆಎಸ್ಎಸ್ ನಲ್ಲಿ ಬ್ರಿಡ್ಜ್ ಕೋರ್ಸ್
511 ಮಂದಿ ವಿದ್ಯಾರ್ಥಿಗಳಿಂದ ವಿದ್ಯಾಭ್ಯಾಸ ಮುಂದುವರಿಸಲು ಕೋರಿಕೆ
Team Udayavani, May 1, 2022, 6:21 PM IST
ಮೈಸೂರು : ರಷ್ಯಾ- ಉಕ್ರೇನ್ ನಡುವೆ ಯುದ್ದದ ಹಿನ್ನೆಲೆಯಲ್ಲಿ ವಿದ್ಯಾಭ್ಯಾಸ ಮೊಟಕು ಗೊಳಿಸಿ ಉಕ್ರೇನ್ ನಿಂದ ಮರಳಿ ಅತಂತ್ರ ಸ್ಥಿತಿಗೆ ಸಿಲುಕಿರುವ ವಿದ್ಯಾರ್ಥಿಗಳ ನೆರವಿಗೆ ಸುತ್ತೂರು ಮಠ ಧಾವಿಸಿದೆ.
ಈ ಕುರಿತು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸುದ್ದಿಗಾರರೊಂದಿಗೆ ಮಾತನಾಡಿ, ವೈದ್ಯಕೀಯ ವಿಭಾಗದ ವಿದ್ಯಾರ್ಥಿಗಳು ಪ್ರಾಯೋಗಿಕ ತರಗತಿಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತದೆ. ಆದರೆ ವಿದ್ಯಾರ್ಥಿಗಳಿಗೆ ಯಾವುದೇ ಪ್ರಮಾಣ ಪತ್ರ ನೀಡುವುದಿಲ್ಲ. ಬ್ರಿಡ್ಜ್ ಕೋರ್ಸ್ ನಡೆಸಿರುವುದಾಗಿ ಜೆ ಎಸ್ ಎಸ್ ಶಿಕ್ಷಣ ಸಂಸ್ಥೆ ಪತ್ರ ನೀಡಲಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮೊಟಕು ಆಗದಿರಲೆಂದು ಪ್ರಾಯೋಗಿಕ ತರಗತಿಗಳಲ್ಲಿ ಭಾಗಿಯಾಗಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಬಗ್ಗೆ ಪ್ರಕಟಣೆ ಹೊರ ಬೀಳುತ್ತಿದ್ದಂತೆ, 48 ಗಂಟೆಗಳ ಅವಧಿಯಲ್ಲಿ 511 ಮಂದಿ ವಿದ್ಯಾರ್ಥಿಗಳಿಂದ ವಿದ್ಯಾಭ್ಯಾಸ ಮುಂದುವರಿಸುವುದಾಗಿ ಕೋರಿಕೆ ಸಲ್ಲಿಕೆಯಾಗಿದೆ. ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿ ಲಭ್ಯವಾದ ಬಳಿಕ ವಿದ್ಯಾಭ್ಯಾಸ ಮುಂದುವರಿಕೆಗೆ ಅವಕಾಶ ಕಲ್ಪಿಸಲು ಸುತ್ತೂರು ಮಠ ಮುಂದಾಗಿದೆ. ಅತಂತ್ರಗೊಂಡಿರುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಸುತ್ತೂರು ಶ್ರೀಗಳು ತಿಳಿಸಿದ್ದಾರೆ.
ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಿಗೆ ಸೇರಿದ ವಿದ್ಯಾರ್ಥಿಗಳಿಂದಲೂ ವಿದ್ಯಾಭ್ಯಾಸ ಮುಂದುವರಿಸಲು ಕೋರಿಕೆ ಸಲ್ಲಿಸಲಾಗಿದ್ದು, ಯುದ್ದ ನಿಂತ ಬಳಿಕ ವಿದ್ಯಾರ್ಥಿಗಳು ಮತ್ತೆ ಉಕ್ರೇನ್ ಗೆ ತೆರಳುವ ಸಾಧ್ಯತೆ ಇದ್ದು ಅಲ್ಲಿಯವರೆಗೂ ವಿದ್ಯಾರ್ಥಿಗಳು ಮಾನಸಿಕವಾಗಿ ಸದೃಢರಾಗಿರಲೆಂದು ಬ್ರಿಡ್ಜ್ ಕೋರ್ಸ್ ನಡೆಸಲು ಜೆಎಸ್ಎಸ್ ವಿಶ್ವವಿದ್ಯಾಲಯ ಮುಂದಾಗಿದೆ.