ಎಚ್ಡಿಕೆಗೆ ಅಭಿನಂದನೆ ಹೇಳಿದ ಬಿಎಸ್ವೈ
Team Udayavani, Oct 29, 2019, 3:03 AM IST
ಬೆಂಗಳೂರು: ರಾಜ್ಯ ಸರ್ಕಾರವು ಅತಿವೃಷ್ಟಿ ಹಾಗೂ ಜನರ ಸಮಸ್ಯೆಯನ್ನು ಉತ್ತಮವಾಗಿ ನಿಭಾಯಿಸುತ್ತಿರುವುದರಿಂದ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ನಮ್ಮ ಸರ್ಕಾರದ ಪರವಾಗಿ ಹೇಳಿಕೆ ನೀಡಿದ್ದಾರೆ. ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎನ್ನುವುದು ಕುಮಾರಸ್ವಾಮಿಯವರ ನಂಬಿಕೆ. ಅತಿವೃಷ್ಟಿ ಹಾಗೂ ಬೇರೆ ಬೇರೆ ಭಾಗದ ಜನರ ಸಮಸ್ಯೆಗಳನ್ನು ಸರ್ಕಾರ ಉತ್ತಮವಾಗಿ ನಿಭಾಯಿಸುತ್ತಿದೆ. ಹೀಗಾಗಿ ಈ ಸರ್ಕಾರದ ಕಾರ್ಯವೈಖರಿಗೆ ಅಡ್ಡಿಪಡಿಸಬಾರದು ಎಂದು ನಮ್ಮ ಸರ್ಕಾರಕ್ಕೆ ಬೆಂಬಲಿಸಿ ಹೇಳಿಕೆ ಕೊಟ್ಟಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ವಿರುದ್ಧ ಕಿಡಿ: ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಮನಬಂದಂತೆ ಮಾತನಾ ಡುತ್ತಿದ್ದಾರೆ. ಅವರೇನು ಮಾತನಾ ಡುತ್ತಿದ್ದಾರೆ ಎಂದು ಅವರಿಗೇ ಗೊತ್ತಾಗುತ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲೇ ಗೊಂದಲ ಹುಟ್ಟಿಸುತ್ತಿದ್ದಾರೆ. ತಾವೇ ಎಲ್ಲ ಜವಾಬ್ದಾರಿ ಹೊತ್ತಿದ್ದೇನೆ ಎಂದು ಸಿದ್ದರಾಮಯ್ಯ ಮಾತಾಡುತ್ತಿದ್ದಾರೆ.
ಸಿದ್ದರಾಮಯ್ಯ ಅವರ ಬಗ್ಗೆ ಕಾಂಗ್ರೆಸ್ನವರಿಗೆ ಸಮಾಧಾನ ಇಲ್ಲ. ಜನ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಡಿಕ್ಟೇಟರ್(ಸರ್ವಾಧಿಕಾರಿ) ರೀತಿಯಲ್ಲಿ ಸಿದ್ದರಾಮಯ್ಯ ಮಾತಾಡುತ್ತಿದ್ದಾರೆ. ಅವರ ಇಂಥ ಹೇಳಿಕೆಗಳಿಗೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು.