ಬಿಎಸ್ವೈ ಪಿಎ ಸಂತೋಷ್ ವಿಚಾರಣೆ;ಸ್ಫೋಟವಾಗುತ್ತಾ”ಡೈರಿ’ ರಹಸ್ಯ?
Team Udayavani, Aug 11, 2017, 11:14 AM IST
ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅವರ ಆಪ್ತ ಸಹಾಯಕ ವಿನಯ್ ಮೇಲಿನ ಹಲ್ಲೆ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ನನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದರು.
ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಗುರುವಾರ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ತನ್ನ ವಕೀಲರ ಜತೆ ಹಾಜರಾದ ಸಂತೋಷ್ನನ್ನು ಉತ್ತರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್, ಎಸಿಪಿ ಆನಂದ್ ಬಡಿಗೇರ್ ನೇತೃತ್ವದಲ್ಲಿ ಸುಮಾರು 7 ಗಂಟೆಗೂ ಅಧಿಕ ಕಾಲ ತೀವ್ರ ವಿಚಾರಣೆಗೊಳಪಡಿಸಲಾಯಿತು. ಶುಕ್ರವಾರವೂ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ ಕಳುಹಿಸಲಾಯಿತು.
ಇಂದು ಸ್ಫೋಟವಾಗುತ್ತಾ “ಡೈರಿ’ ರಹಸ್ಯ?: ವಿವಿಧ ಕೋನಗಳಲ್ಲಿ ಪ್ರಶ್ನೆಗಳನ್ನು ಕೇಳಿದ್ದೇವೆ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದ್ದು, ಇಡೀ ಪ್ರಕರಣದ ಕೇಂದ್ರ ಬಿಂದುವಾಗಿರುವ ಸಿಡಿ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಶುಕ್ರವಾರದ ವಿಚಾರಣೆಯಲ್ಲಿ ಸಿ.ಡಿ. ಬಗ್ಗೆ ಪ್ರಶ್ನೆಗಳನ್ನು ಕೇಳಲು ತನಿಖಾ ತಂಡ ನಿರ್ಧರಿಸಿದೆ ಎನ್ನಲಾಗುತ್ತಿದ್ದು, ನಾಳೆಯ ವಿಚಾರಣೆಯಲ್ಲಿ ಇಡೀ ಪ್ರಕರಣದ ಸತ್ಯಾಸತ್ಯತೆ ಬಯಲಾಗಲಿದೆ. ತನಿಖೆ ಪ್ರಗತಿಯಲ್ಲಿರುವಾಗ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.