ವರಿಷ್ಠರ ಅಂಗಳದಲ್ಲಿ ಸಂಪುಟ ಸರ್ಕಸ್: ಐವರಿಗೆ ಸಚಿವ ಸ್ಥಾನ ?
ಶಂಕರ್, ಎಂಟಿಬಿ ಸೇರ್ಪಡೆ ಸಾಧ್ಯತೆ
Team Udayavani, Sep 19, 2020, 6:33 AM IST
ಹೊಸದಿಲ್ಲಿ: ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜತೆಗೆ ಸಮಾಲೋಚನೆ ಮತ್ತಿತರ ಉದ್ದೇಶಗಳಿಗಾಗಿ ಹೊಸದಿಲ್ಲಿಗೆ ತೆರಳಿರುವ ಸಿಎಂ ಯಡಿಯೂರಪ್ಪ ಅವರು ಶುಕ್ರವಾರ ಕಾವೇರಿ ಕರ್ನಾಟಕ ಭವನ ಪುನರ್ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಿದ್ದು, ಚೆಂಡು ಸದ್ಯ ವರಿಷ್ಠರ ಅಂಗಳದಲ್ಲಿದೆ.
ನಾಲ್ಕೈದು ಮಂದಿಯನ್ನು ಸಂಪುಟದಿಂದ ಕೈಬಿಟ್ಟು ಪುನಾರಚಿಸಬೇಕೆಂಬ ಯಡಿಯೂರಪ್ಪ ಅವರ ಮನವಿಗೆ ವರಿಷ್ಠರಿಂದ ಸಕಾರಾತ್ಮಕ ಸ್ಪಂದನೆ ದೊರೆತಂತಿಲ್ಲ. ಸಂಪುಟ ವಿಸ್ತರಣೆಗಷ್ಟೇ ಒಪ್ಪಿಗೆ ಸೂಚಿಸಲಾಗಿದೆ ಎನ್ನಲಾಗಿದ್ದು, ಎಷ್ಟು ಮಂದಿಯನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ತಿಳಿಸುವುದಾಗಿ ಜೆ.ಪಿ. ನಡ್ಡಾ ತಿಳಿಸಿದ್ದಾರೆ. ಬಹುತೇಕ ಶನಿವಾರ ಸ್ಪಷ್ಟ ಚಿತ್ರಣ ಸಿಗಲಿದೆ ಎನ್ನಲಾಗಿದೆ.
ವರಿಷ್ಠರು ವಿಸ್ತರಣೆ ಮತ್ತು ಯಡಿಯೂರಪ್ಪ ಅವರ ಸಂಭಾವ್ಯರ ಪಟ್ಟಿಗೆ ಒಪ್ಪಿಗೆ ನೀಡಿದರೆ ರವಿವಾರವೇ ಸಂಪುಟ ವಿಸ್ತರಣೆಯಾಗಬಹುದು. ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಆದರೂ ಆರ್. ಶಂಕರ್ ಮತ್ತು ಎಂ.ಟಿ.ಬಿ. ನಾಗರಾಜ್ ಸಂಪುಟ ಸೇರ್ಪಡೆ ಖಚಿತವಾಗಿದ್ದು, ಮೂಲ ಬಿಜೆಪಿಯಿಂದ ಮೂವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆಯೆಂದು ತಿಳಿದುಬಂದಿದೆ.
ಮೋದಿ ಭೇಟಿ
ದಿಲ್ಲಿ ಪ್ರವಾಸದಲ್ಲಿರುವ ಸಿಎಂ ಯಡಿಯೂರಪ್ಪ ಅವರು ಶುಕ್ರವಾರ ಸಂಸತ್ ಭವನದಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಚರ್ಚಿಸಿದರು. ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸುವಂತೆ ಪ್ರಧಾನಿ ಸೂಚಿಸಿರುವುದಾಗಿ ಭೇಟಿ ಬಳಿಕ ಬಿಎಸ್ವೈ ಹೇಳಿದ್ದರು. ಹಾಗಾಗಿ ವರಿಷ್ಠರಿಂದ ಶುಕ್ರವಾರವೇ ಸ್ಪಷ್ಟ ಸೂಚನೆ ಹೊರಬೀಳುವ ನಿರೀಕ್ಷೆ ಮೂಡಿತ್ತು. ಆದರೆ ರಾತ್ರಿ ಹೊತ್ತಿಗೆ ನಿರೀಕ್ಷೆ ಹುಸಿಯಾಯಿತು.
ಸಂಜೆ ಜೆ.ಪಿ. ನಡ್ಡಾ ಅವರನ್ನು ಭೇಟಿಯಾದ ಬಿಎಸ್ವೈ ವಿಸ್ತೃತವಾಗಿ ಚರ್ಚಿಸಿದರು. ಬಳಿಕ ಪ್ರಧಾನಿಯವರೊಂದಿಗೆ ಚರ್ಚಿಸಿ ಮಾಹಿತಿ ನೀಡು ವುದಾಗಿ ಜೆ.ಪಿ. ನಡ್ಡಾ ತಿಳಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಹಾಗಾಗಿ ವರಿಷ್ಠರ ನಿಲುವಿನ ಬಗ್ಗೆ ಕುತೂಹಲ ಮೂಡಿದೆ.
ನಾಳೆ ಸಂಪುಟ ವಿಸ್ತರಣೆ?
ವರಿಷ್ಠರು ಶನಿವಾರ ವಿಸ್ತರಣೆಗೆ ಒಪ್ಪಿಗೆ ನೀಡಿದರೆ ರವಿವಾರವೇ ಕೆಲವರು ಸಂಪುಟ ಸೇರುವ ಸಾಧ್ಯತೆ ಇದೆ. ಹೀಗಾಗಿ ಶನಿವಾರ ಸಂಜೆ ದಿಲ್ಲಿಯಿಂದ ಹೊರಡಲು ಚಿಂತಿಸಿದ್ದ ಯಡಿಯೂರಪ್ಪ ಅವರು ಜೆ.ಪಿ. ನಡ್ಡಾ ಭೇಟಿ ಬಳಿಕ ಶನಿವಾರ ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಮರಳಲಿದ್ದಾರೆ. ಹಾಗಾಗಿ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಿಸಿ ಕೊಟ್ಟ ಮಾತು ಉಳಿಸಿಕೊಳ್ಳಬೇಕೆಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಲೆಕ್ಕಾಚಾರ ಕೈಗೂಡುವುದೇ ಎಂಬುದನ್ನು ಕಾದು ನೋಡಬೇಕಿದೆ. ಈ ಮಧ್ಯೆ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದಿಲ್ಲಿಗೆ ತೆರಳಿದ್ದ ಮಾಜಿ ಸಚಿವ ಎಚ್. ವಿಶ್ವನಾಥ್, ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಶುಕ್ರವಾರ ದಿಲ್ಲಿಯಿಂದ ನಿರ್ಗಮಿಸಿದ್ದಾರೆ.
ಅವಕಾಶ ನೀಡಿದರೆ ಸಚಿವನಾಗಿ ಕೆಲಸ
ಸಂಪುಟ ವಿಸ್ತರಣೆ ಸಿಎಂ ಅವರ ಪರಮಾಧಿಕಾರ. ಅವಕಾಶ ನೀಡಿದರೆ ಸಚಿವನಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಕೇಂದ್ರ ಸಚಿವರಾದ ಸದಾನಂದ ಗೌಡ, ಪ್ರಹ್ಲಾದ ಜೋಶಿ, ಪಕ್ಷದ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿದ್ದೇನೆ. ಹಿಂದೆ ಅಬಕಾರಿ ಸಚಿವನಾಗಿ ಉತ್ತಮ ಕೆಲಸ ಮಾಡಿದ್ದೇನೆ. ಈ ಬಾರಿ ಅವಕಾಶ ಮಾಡಿದರೆ ಚೆನ್ನಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ದಿಲ್ಲಿಗೆ ತೆರಳಿದ್ದ ಅವರು ಹೇಳಿದ್ದಾರೆ.
ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರೊಂದಿಗೆ ವಿವರವಾಗಿ ಮಾತುಕತೆ ನಡೆಸಿದ್ದೇನೆ. ಪ್ರಧಾನಿ ಅವರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದಾರೆ. ಹಿಂದೆಯೂ ಈ ರೀತಿಯ ಚರ್ಚೆಯಾಗಿದೆ. ನಡ್ಡಾ ಅವರು ಪ್ರಧಾನಿ ಜತೆಗೆ ಶನಿವಾರ ಚರ್ಚಿಸಿ ತಿಳಿಸುತ್ತಾರೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತಂತೆ ಅವರು ಯಾವ ಸೂಚನೆ ಕೊಡುತ್ತಾರೆಯೋ ಅದರಂತೆ ಮುಂದುವರಿಯಲಾಗುವುದು. ಅಧಿವೇಶನಕ್ಕೂ ಮೊದಲೇ ಮಾಡಬೇಕು ಎಂಬ ಅಪೇಕ್ಷೆ ಇದೆ. ವರಿಷ್ಠರು ಚರ್ಚಿಸಿ ನೀಡುವ ಸೂಚನೆಯಂತೆ ತೀರ್ಮಾನ ಕೈಗೊಳ್ಳಬೇಕಾಗುತ್ತದೆ.
– ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ
ನಾಯಕತ್ವ ಬದಲಾವಣೆ ಇಲ್ಲ. ಯಡಿಯೂರಪ್ಪ ಅವರೇ ಪೂರ್ಣ ಅವಧಿ ಪೂರೈಸುತ್ತಾರೆ. ಅವರು ದಿಲ್ಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿರುವುದು ಬೇರೆ ವಿಷಯಗಳಿಗೆ.
– ಬಿ. ಶ್ರೀರಾಮುಲು, ಆರೋಗ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್