ಸಂಪುಟ ವಿಸ್ತರಣೆಯೋ? ಪುನಾರಚನೆಯೋ?
ಮೂಡದ ಒಮ್ಮತ ; ಖಾಲಿ ಸ್ಥಾನ ಭರ್ತಿಗೆ ಸಿದ್ದು ಒಲವು,ಸಂಪುಟ ಪುನಾರಚನೆಗೆ ಪರಂ ಪಟ್ಟು
Team Udayavani, May 30, 2019, 6:00 AM IST
ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರ ನಡುವೆಯೇ ಭಿನ್ನಾಭಿಪ್ರಾಯ ಮೂಡಿದೆ.
ಸದ್ಯದ ಪರಿಸ್ಥಿತಿಯಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು, ಬಿಜೆಪಿಯ ‘ಆಪರೇಷನ್ ಕಮಲ’ ತಡೆಯಲು ಅತೃಪ್ತರ ಮನವೊಲಿಕೆಗಾಗಿ ಸಂಪುಟ ವಿಸ್ತರಣೆ ಮಾತ್ರ ಮಾಡಬೇಕಾ? ಅಥವಾ ಪುನಾರಚನೆಗೆ ಕೈ ಹಾಕಬೇಕಾ? ಎನ್ನುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದ್ದು, ಈ ವಿಷಯದಲ್ಲಿ ನಾಯಕರ ನಡುವೆ ಒಮ್ಮತ ಮೂಡಿಲ್ಲ.
ಬುಧವಾರ ಬೆಳಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಗೃಹ ಸಚಿವ ಎಂ.ಬಿ.ಪಾಟೀಲ್ ಪಾಲ್ಗೊಂಡಿದ್ದರು. ಸಚಿವಾಕಾಂಕ್ಷಿಗಳು ಹೆಚ್ಚಾಗಿದ್ದು, ಯಾವುದೇ ಸಚಿವರನ್ನು ಕೈ ಬಿಟ್ಟು ಬೇರೆಯವರಿಗೆ ಅವಕಾಶ ನೀಡುವುದರಿಂದ ಅತೃಪ್ತ ಶಾಸಕರ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಬಹುದು. ಹೀಗಾಗಿ, ಹಾಲಿ ಖಾಲಿ ಇರುವ ಮೂರು ಸ್ಥಾನಗಳನ್ನು ಮಾತ್ರ ಭರ್ತಿ ಮಾಡಿ ಇಬ್ಬರು ಪಕ್ಷೇತರರು ಹಾಗೂ ಕಾಂಗ್ರೆಸ್ನ ಒಬ್ಬರು ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಿದ್ದರಾಮಯ್ಯ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಆದರೆ, ಉಪ ಮುಖ್ಯಮಂತ್ರಿ ಡಾ. ಪರಮೇಶ್ವರ್ ಸಂಪುಟ ಪುನಾರಚನೆಗೆ ಒಲವು ವ್ಯಕ್ತಪಡಿಸಿದ್ದಾರೆ. ಪುನಾರಚನೆ ಮಾಡುವುದಾದರೆ ಹಿರಿಯ ಸಚಿವರಾದ ಕೆ.ಜೆ.ಜಾರ್ಜ್, ಆರ್.ವಿ.ದೇಶಪಾಂಡೆ, ಎಂ.ಬಿ.ಪಾಟೀಲ್ ಸೇರಿದಂತೆ ಐದಾರು ಹಾಲಿ ಸಚಿವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ಮಾಡಿಕೊಡುವ ಮೂಲಕ ಅತೃಪ್ತರನ್ನು ಸಮಾಧಾನ ಪಡಿಸಬಹುದು ಎಂಬ ಲೆಕ್ಕಾಚಾರ ಮುಂದಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಜಾರ್ಜ್ ಹಾಗೂ ದೇಶಪಾಂಡೆಯವರನ್ನು ಕೈ ಬಿಡುವ ಪ್ರಸ್ತಾವಕ್ಕೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಷಯದಲ್ಲಿ ಇಬ್ಬರೂ ನಾಯಕರ ನಡುವೆ ಒಮ್ಮತ ಮೂಡಿಲ್ಲ ಎಂದು ತಿಳಿದು ಬಂದಿದೆ. ಈ ಕುರಿತು ಗುರುವಾರ ವೇಣುಗೋಪಾಲ್ ನೇತೃತ್ವದಲ್ಲಿ ಮತ್ತೂಂದು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಇದರ ನಡುವೆ ರಮೇಶ್ ಜಾರಕಿಹೊಳಿಯೊಂದಿಗೆ ಗುರುತಿಸಿಕೊಂಡಿದ್ದಾರೆ ಎನ್ನಲಾದ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹಾಗೂ ಲಿಂಗಸಗೂರು ಶಾಸಕ ಡಿ.ಎಸ್.ಹೂಲಗೇರಿ ಅವರನ್ನು ಸಭೆಗೆ ಕರೆಸಿ ಯಾವುದೇ ಕಾರಣಕ್ಕೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ಮನವೊಲಿಸುವ ಪ್ರಯತ್ನ ನಡೆಸಲಾಯಿತು. ಸಚಿವಾಕಾಂಕ್ಷಿಗಳಾದ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಹಾಗೂ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಟಾರ್ ಕೂಡ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ, ಸಂಪುಟ ಸೇರುವ ಬಯಕೆ ವ್ಯಕ್ತಪಡಿಸಿದ್ದಾರೆ.
ದೇವೇಗೌಡರಿಗೆ ರಾಜ್ಯಸಭೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ರಾಜ್ಯಸಭೆಗೆ ಕಳುಹಿಸಿ ಕೊಡಬೇಕೆಂಬ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗಿದೆ. ಈ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿಷಯ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.
ಸಾಧ್ಯವಾದರೆ ಕಾಂಗ್ರೆಸ್ನಿಂದ ಹೆಚ್ಚು ಅವಧಿ ಹೊಂದಿರುವ ರಾಜ್ಯಸಭಾ ಸದಸ್ಯರಿಂದ ರಾಜೀನಾಮೆ ಪಡೆದು, ದೇವೇಗೌಡರಿಗೆ ಅವಕಾಶ ಕಲ್ಪಿಸಿಕೊಡುವ ಬಗ್ಗೆ ಆಲೋಚನೆ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ರಾಜ್ಯಸಭೆಗೆ ಕಾಂಗ್ರೆಸ್ನಿಂದ ಆಯ್ಕೆಯಾಗಿರುವ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್ ಹಾಗೂ ಸೈಯದ್ ನಾಸೀರ್ ಹುಸೇನ್ ಅವರ ಅವಧಿ 2024ರ ವರೆಗೆ ಇದೆ.
ರಾಜ್ಯ ಸರ್ಕಾರಕ್ಕೆ ಯಾವುದೇ ಧಕ್ಕೆಯಿಲ್ಲ. ನಾವು 2 ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದೇವೆ. ನಮ್ಮ ಪಕ್ಷದ ಎಲ್ಲ ಶಾಸಕರು ಒಗ್ಗಟ್ಟಾಗಿದ್ದಾರೆ. ಬಿಜೆಪಿಯವರು
ಆರಂಭದಿಂದಲೂ ಸರ್ಕಾರ ಉರುಳಿಸುವಪ್ರಯತ್ನ ನಡೆಸುತ್ತಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ಹಿರಿಯ ನಾಯಕರ ಅಭಿಪ್ರಾಯಪಡೆದು ತೀರ್ಮಾನ ಮಾಡುತ್ತೇವೆ.
-ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ.
ಸರ್ಕಾರ ಉರುಳಿಸಲು ಬಿಜೆಪಿಯವರು ಏನು ಪ್ರಯತ್ನ ಮಾಡುತ್ತಾರೋ ಮಾಡಲಿ, ಅವರಿಗೆ ಒಳ್ಳೆಯದಾಗಲಿ. ಸಂಪುಟ ವಿಸ್ತರಣೆಯ ಬಗ್ಗೆ ರಾಜ್ಯ ಉಸ್ತುವಾರಿ ತೀರ್ಮಾನ ತೆಗೆದು ಕೊಳ್ಳುತ್ತಾರೆ. ಪಕ್ಷ ವಿರೋಧಿ ಚಟುವಟಿಕೆ, ಸಣ್ಣಪುಟ್ಟ ವಿಷಯಗಳ ಬಗ್ಗೆ ಈಗ ತಲೆ ಕೆಡಿಸಿಕೊಳ್ಳುವು ದಿಲ್ಲ. ಸರ್ಕಾರವನ್ನು ಉಳಿಸಿಕೊಳ್ಳುವುದು ನಮ್ಮ ಮೊದಲ ಆದ್ಯತೆ.
– ಡಿ.ಕೆ.ಶಿವಕುಮಾರ್, ಜಲ ಸಂಪನ್ಮೂಲ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ