ಸಚಿವ ಡಿಕೆಶಿ ತಾಯಿ ವಿರುದ್ಧದ ಪ್ರಕರಣಕ್ಕೆ ತಡೆ
Team Udayavani, Jun 21, 2019, 5:29 AM IST
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ತಾಯಿ ಗೌರಮ್ಮ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಆಸ್ತಿ ಮುಟ್ಟುಗೋಲಿಗೆ ಸಂಬಂಧಿಸಿದಂತೆ ತೆರಿಗೆ ಇಲಾಖೆಯ ‘ಬೇನಾಮಿ ಆಸ್ತಿ ತಡೆ ಘಟಕ’ ಜಾರಿಗೊಳಿಸಿದ್ದ ಶೋಕಾಸ್ ನೋಟಿಸ್ ರದ್ದುಗೊಳಿಸುವಂತೆ ಕೋರಿ ಗೌರಮ್ಮ ಸಲ್ಲಿಸಿದ್ದ ತಕರಾರು ಅರ್ಜಿ ನ್ಯಾ. ಆಲೋಕ್ ಆರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯ ‘ಬೇನಾಮಿ ಆಸ್ತಿ ತಡೆ ಘಟಕ’ ನೀಡಿದ್ದ ನೋಟಿಸ್ ಹಾಗೂ ಅದಕ್ಕೆ ಸಂಬಂಧಪಟ್ಟ ಮುಂದಿನ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿತು. ಅಲ್ಲದೇ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಕೇಂದ್ರ ಸರ್ಕಾರ ಹಾಗೂ ಆದಾಯ ತೆರಿಗೆ ಇಲಾಖೆಯ ಬೇನಾಮಿ ಆಸ್ತಿ ತಡೆ ಘಟಕ್ಕೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿತು.