ಜಾತಿ ಸಿಂಧುತ್ವ: ಕಾಂಗ್ರೆಸ್ ಶಾಸಕ ಕೊತ್ತನೂರು ಮಂಜುನಾಥ್ ಅರ್ಜಿ ವಜಾ
Team Udayavani, Dec 21, 2023, 1:18 AM IST
ಬೆಂಗಳೂರು: ಕೋಲಾರದ ಹಾಲಿ ಕಾಂಗ್ರೆಸ್ ಶಾಸಕ, ಮುಳಬಾಗಿಲ ಮೀಸಲು ಕ್ಷೇತ್ರದ ಮಾಜಿ ಶಾಸಕ ಜಿ. ಮಂಜುನಾಥ್ (ಕೊತ್ತನೂರು ಮಂಜುನಾಥ್) ಅವರಿಗೆ ಜಾತಿ ಸಿಂಧುತ್ವ ಪ್ರಕರಣದಲ್ಲಿ ಮತ್ತೆ ಹಿನ್ನಡೆ ಉಂಟಾಗಿದೆ. ಕೋಲಾರ ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನ ಸಮಿತಿಯ ನಿರ್ಣಯ ಪ್ರಶ್ನಿಸಿ ಆವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಜಿಲ್ಲಾಧಿಕಾರಿ ನೇತೃತ್ವದ ಜಾತಿ ಪರಿಶೀಲನ ಸಮಿತಿ ನಿರ್ಣಯ ಪ್ರಶ್ನಿಸಿ ಜಿ. ಮಂಜುನಾಥ್ ಸಲ್ಲಿಸಿದ್ದ ತಕಾರರು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಬುಧವಾರ ಪ್ರಕಟಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿದೆ. ಆದರೆ, ಹೈಕೋರ್ಟ್ನ ಈ ಆದೇಶದಿಂದ ಅವರ ಹಾಲಿ ಶಾಸಕ ಸ್ಥಾನಕ್ಕೆ ಯಾವುದೇ ಬಾಧೆ ಆಗುವುದಿಲ್ಲ. 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಗೆದ್ದಾಗ ಪಡೆದುಕೊಂಡಿದ್ದ ಸೌಲಭ್ಯಗಳನ್ನು ಪೂರ್ವಾಯನ್ವಯವಾಗುವಂತೆ ಅವರಿಂದ ವಾಪಸ್ ಪಡೆದುಕೊಳ್ಳಬಹುದು ಎಂದು ಕೋರ್ಟ್ ಹೇಳಿದೆ.