ಕಾಮಗಾರಿ ಪೂರ್ಣಗೊಳಿಸಲು ಕ್ರಮ: ಸಿಎಂ ಭರವಸೆ
Team Udayavani, Sep 22, 2021, 5:59 AM IST
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಆಡಳಿತಾತ್ಮಕ ಅನುಮೋದನೆ ಪಡೆದು ಟೆಂಡರ್ ಪ್ರಕ್ರಿಯೆ ನಡೆದಿದ್ದ ಎಲ್ಲ ಕಾಮಗಾರಿಗಳನ್ನು ಪೂರ್ಣ ಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಭರವಸೆ ನೀಡಿದರು.
ಜೆಡಿಎಸ್ ಸದಸ್ಯರ ಚರ್ಚೆಗೆ ಸರಕಾರದ ಪರವಾಗಿ ಉತ್ತರಿಸಿದ ಅವರು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿ ಆದೇಶ ಕೊಟ್ಟಿದ್ದರೆ ಅಂತಹ ಕಾಮಗಾರಿ ಪೂರ್ಣಗೊಳಿಸಲಾಗುವುದು. ಟೆಂಡರ್ ಪ್ರಕ್ರಿಯೆ ನಡೆಯದಿರುವ ಯೋಜನೆಗಳನ್ನೂ ಪ್ರಾರಂಭಿಸಲು ಹಣಕಾಸು ಲಭ್ಯತೆ ಮೇಲೆ ಕ್ರಮ ಕೈಗೊಳ್ಳಲಾಗು ವುದು. ಅದು ಕೇವಲ ಜೆಡಿಎಸ್ ಶಾಸಕರ ಕ್ಷೇತ್ರ ಅಂತಲ್ಲ, ರಾಜ್ಯದ 224 ಕ್ಷೇತ್ರಗಳಲ್ಲೂ ಕೈಗೊಂಡ ಕಾಮಗಾರಿಗಳಿಗೆ ಅನ್ವಯ ಆಗುತ್ತದೆ ಎಂದು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 943 ಕೋಟಿ ರೂ. ಮೊತ್ತದ ಕಾಮಗಾರಿಗಳು, ನಗರಾಭಿವೃದ್ಧಿ ಇಲಾಖೆಯ 232 ಕೋಟಿ ರೂ. ಮೊತ್ತದ ಕಾಮಗಾರಿಗಳು, ಲೋಕೋಪಯೋಗಿ ಇಲಾಖೆಯ 4742 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.
ಅನುದಾನ ಬಿಡುಗಡೆಗೆ ಜೆಡಿಎಸ್ ಆಗ್ರಹ:
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ರೂಪಿಸಿದ ಯೋಜನೆ ಹಾಗೂ ಶಾಸಕರ ಕ್ಷೇತ್ರಗಳಿಗೆ ಬಿಡುಗಡೆ ಮಾಡಿದ್ದ ಅನುದಾನ ಸ್ಥಗಿತಗೊಳಿಸಿರುವ ಬಗ್ಗೆ ಜೆಡಿಎಸ್ ಸದಸ್ಯರು ಸರಕಾರದ ವಿರುದ್ಧ ಮುಗಿಬಿದ್ದರು.
ಸಾರ್ವಜನಿಕ ಮಹತ್ವದ ವಿಷಯದಡಿ ಚರ್ಚೆ ಆರಂಭಿಸಿದ ಎಚ್.ಡಿ.ರೇವಣ್ಣ, ನೀರಾವರಿ ಹಾಗೂ ಲೋಕೋಪಯೋಗಿ ಇಲಾಖೆಯಲ್ಲಿ ಕೈಗೊಂಡಿದ್ದ ಯೋಜನೆಗಳಿಗೆ ಹಣಕಾಸು ನೆರವು ಸಿಗದೆ ನಿಲ್ಲಿಸುವಂತಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ 1277 ಕೋಟಿ ರೂ. ಬಿಡುಗಡೆ ಮಾಡಿದರೂ ಜೆಡಿಎಸ್ ಶಾಸಕರಿಗೆ ಐದು ರೂಪಾಯಿ ಬಂದಿಲ್ಲ ಎಂದು ಹೇಳಿದರು.
ಎಂಜಿನಿಯರಿಂಗ್ ಕಾಲೇಜು, ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಿಂದುಳಿದ ಹಾಗೂ ದಲಿತ ಸಮುದಾಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಸ್ವಾತಂತ್ರೊéàತ್ಸವದ ಅಮತೃಮಹೋತ್ಸವ ಯಾವ ಪುರುಷಾರ್ಥಕ್ಕೆ ಆಚರಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ರೇವಣ್ಣ ನಡುವೆ ಮಾತಿನ ಚಕಮಕಿಯೂ ನಡೆಯಿತು. ಕೆಲಕಾಲ ಸದನದಲ್ಲಿ ಗದ್ದಲ ಉಂಟಾಯಿತು.