20 ಸಾವಿರ ಕೋಟಿ ರೂ. ಕೃಷಿ ಸಾಲ ನೀಡಲು ಸಿಎಂ ಸೂಚನೆ
Team Udayavani, Jul 27, 2020, 10:41 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಮುಂದಿನ ವರ್ಷ 30 ಲಕ್ಷ ರೈತರಿಗೆ 20 ಸಾವಿರ ಕೋಟಿ ರೂ. ಕೃಷಿ ಸಾಲ ನೀಡಲು ಸಿದ್ಧತೆ ಮಾಡಿಕೊಳ್ಳುವಂತೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಭಾನುವಾರ “ಕಾವೇರಿ’ ನಿವಾಸದಲ್ಲಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಹಕಾರ ಇಲಾಖೆಯ ಸಾಧನೆಯ ಕಿರುಹೊತ್ತಿಗೆ ” ಸಹಕಾರದ ಪ್ರಗತಿ – 2020′ ಬಿಡುಗಡೆಗೊಳಿಸಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ರೈತರಿಗೆ 14,500 ಕೋಟಿ ರೂ. ಕೃಷಿ ಸಾಲ ನೀಡುವ ಗುರಿತಯಿದೆ. ಈಗಾಗಲೇ 8.5 ಲಕ್ಷ ರೈತರಿಗೆ 5,600 ಕೋಟಿ ರೂ. ಕೃಷಿ ಸಾಲ ವಿತರಣೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ರೈತರಿಗೆ ಕೃಷಿ ಚಟುವಟಿಕೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ನಿರ್ದೇಶನ ನೀಡಿದರು.
ರಾಜ್ಯದಲ್ಲಿ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಆ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಸಚಿವ ಎಸ್.ಟಿ.ಸೋಮಶೇಖರ್ ಮಾತ ನಾಡಿ, ಮುಖ್ಯಮಂತ್ರಿ ಯವರ ಒಂದು ವರ್ಷದ ಸಾಧನೆ ಜೊತೆಗೆ ನಾನು ಸಹಕಾರ ಸಚಿವನಾಗಿ 3 ತಿಂಗಳು ನಿರ್ವಹಿಸಿದ ಜವಾಬ್ದಾರಿ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ಸೂಚಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಈಗಾಗಲೇ 25 ಜಿಲ್ಲೆಗಳಿಗೆ ಭೇಟಿ ನೀಡಿ ಸ್ಥಿತಿಗತಿಗಳನ್ನು ಅರಿತಿದ್ದೇನೆ. ಪ್ರತಿ ಭೇಟಿ ವೇಳೆಯೂ ರೈತರ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ
ಎಂದರು. ಈ ವರ್ಷ ರೈತರಿಗೆ ಮಧ್ಯಮಾವಧಿ, ಅಲ್ಪಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲವಾಗಿ 14, 500 ಕೋಟಿ ರೂ. ಸಾಲ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಚಾಲನೆ ನೀಡಲಾಗಿದ್ದು, ಈಗಾಗಲೇ 8.5 ಲಕ್ಷ ರೈತರಿಗೆ 5,600 ಕೋಟಿ ರೂ. ಕೃಷಿ ಸಾಲ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಎಪಿಎಂಸಿ ಕಾಯ್ದೆ ತಿದ್ದುಪಡಿಯಾದ ನಂತರ ಶೇ.1 ಕ್ಕೆ ಸೆಸ್ ಇಳಿಸಲಾಗಿತ್ತು. ಬಳಿಕ ಇನ್ನೂ ಇಳಿಕೆ ಮಾಡುವ ಸಂಬಂಧ ಕೂಗು ಕೇಳಿಬಂದಿದ್ದರಿಂದ ಸಂಪುಟ ಸಭೆಯಲ್ಲಿ ಚರ್ಚಿಸಿ ಶೇ. 0.35ಕ್ಕೆ ಸೆಸ್ ಇಳಿಕೆ ಮಾಡಲಾಗಿದೆ. ಕೊರೊನಾ ವಾರಿಯರ್ಸ್ಗಳಾದ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ
ರೂ. ನಂತೆ 12.75 ಕೋಟಿ ರೂ. ಇಲಾಖೆ ವತಿಯಿಂದ ನೀಡಲಾಗುತ್ತಿದ್ದು, ಈಗಾಗಲೇ 32 ಸಾವಿರ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ನೀಡಲಾಗಿದೆ. ಉಳಿದ 10 ಸಾವಿರ ಆಶಾ ಕಾರ್ಯಕರ್ತೆಯರಿಗೆ ಶೀಘ್ರ ನೀಡಲಾಗುವುದು ಎಂದರು.
ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಯಡಿಯೂರಪ್ಪ ಮುಖ್ಯ ಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಾಗಲೆಲ್ಲ ಸವಾಲುಗಳೇ ಬರುತ್ತವೆ. ಸವಾಲು ಗಳನ್ನು ಎದುರಿಸಿ ಉತ್ತಮ ಕಾರ್ಯ ಮಾಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಕಾರ್ಯವೈಖರಿ ಬಗ್ಗೆ ಖುಷಿ ಇದೆ. ಅವರು ಇಲಾಖೆ ಹೊಣೆಗಾರಿಕೆ ವಹಿಸಿಕೊಂಡು ನಾಲ್ಕು ತಿಂಗಳಾದರೂ
ನಾಲ್ಕು ಬಾರಿ ಸಚಿವರಾದ ಅನುಭವದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವರ ಕೆಲಸದ ಬಗ್ಗೆ ಪಕ್ಷ ಹಾಗೂ ನಮಗೆ ಹೆಮ್ಮೆ ಇದೆ.
● ಆರ್.ಅಶೋಕ್, ಕಂದಾಯ ಸಚಿವ