ಸಿಎಂ ಗ್ರಾಮ ವಾಸ್ತವ್ಯ ಬಿಟ್ಟು ಹುಚ್ಚಾಸ್ಪತ್ರೆ ವಾಸ್ತವ್ಯ ಮಾಡಲಿ
Team Udayavani, Jun 27, 2019, 3:00 AM IST
ಬೆಳಗಾವಿ: ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಧಾರವಾಡದ ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು. ಇತ್ತೀಚಿನ ದಿನಗಳಲ್ಲಿ ಅವರ ಮಾನಸಿಕ ಸ್ಥಿತಿ ಸರಿಯಿಲ್ಲ. ಸಿಎಂ ಗ್ರಾಮ ವಾಸ್ತವ್ಯ ಮಾಡುವ ಬದಲು ಮಾನಸಿಕ ಆಸ್ಪತ್ರೆಯಲ್ಲಿ ವಾಸ್ತವ್ಯ ಮಾಡಿದರೆ ಎಲ್ಲವೂ ಸರಿ ಹೋಗುತ್ತದೆ ಎಂದು ಜಿಲ್ಲೆಯ ಬಿಜೆಪಿ ಶಾಸಕರು ಹರಿಹಾಯ್ದಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಉಮೇಶ ಕತ್ತಿ, “ಮುಖ್ಯಮಂತ್ರಿಗೆ ಒಂದೆಡೆ ಅಪ್ಪನ ತೊಂದರೆ, ಮತ್ತೂಂದೆಡೆ ಅಣ್ಣನ ತೊಂದರೆ. ಇದೆಲ್ಲದರ ನಡುವೆ ಸಮ್ಮಿಶ್ರ ಸರ್ಕಾರದ ಸಮಸ್ಯೆಗಳು. ಹೀಗಾಗಿ, ಅವರ ಆರೋಗ್ಯ ಸರಿಯಿಲ್ಲ. ಅವರನ್ನು ಬದುಕಲು ಬಿಡಿ. ಇದು ನನ್ನ ಮನವಿ’ ಎಂದು ಮಾರ್ಮಿಕವಾಗಿ ಹೇಳಿದರು.
ರಾಜ್ಯದ ಮುಖ್ಯಮಂತ್ರಿಯಾಗಿದ್ದುಕೊಂಡು ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು. ದೇವೇಗೌಡರು ರಾಜಕೀಯ ನಿವೃತ್ತಿ ಪಡೆಯಬೇಕು. ಕುಮಾರಸ್ವಾಮಿಯವರು ತಂದೆಯ ಮಾತು ಕೇಳಿ ಹಾಳಾಗುತ್ತಿದ್ದಾರೆ ಎಂಬುದು ನಮ್ಮ ಭಾವನೆ ಎಂದರು.
ರಾಯಬಾಗದ ಶಾಸಕ ದುರ್ಯೋಧನ ಐಹೊಳೆ ಮಾತನಾಡಿ, ಕಳೆದ ಮೂರು ತಿಂಗಳಿಂದ ಭೀಕರ ಬರಗಾಲ ಇತ್ತು. ಆಗ ಗ್ರಾಮ ವಾಸ್ತವ್ಯ ಮಾಡಲಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡಲಿಲ್ಲ. ಈಗ ರಾಜ್ಯದಲ್ಲಿ ಮಳೆ ಆಗುತ್ತಿದೆ. ಸಿಎಂ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಒಂದು ಪಕ್ಷಕ್ಕೆ ಸೀಮಿತವಾದ ಮುಖ್ಯಮಂತ್ರಿಯಲ್ಲ, ರಾಜ್ಯಕ್ಕೆ ಮುಖ್ಯಮಂತ್ರಿ ಎಂಬುದನ್ನು ತಿಳಿದುಕೊಳ್ಳಬೇಕು. ಹೇಳಿಕೆ ನೀಡುವಾಗ ಆಲೋಚನೆ ಮಾಡಿ ಮಾತನಾಡಬೇಕು ಎಂದರು.