ಸಚಿವ ಅಶ್ವತ್ಥನಾರಾಯಣ ವಿರುದ್ಧದ ಸಮನ್ಸ್ ರದ್ದು
ಆಪರೇಷನ್ ಕಮಲಕ್ಕೆ ಹಣದ ಆಮಿಷ ಆರೋಪ
Team Udayavani, Jan 5, 2022, 5:30 AM IST
ಬೆಂಗಳೂರು: ಆಪರೇಷನ್ ಕಮಲದ ಭಾಗವಾಗಿ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಅವರಿಗೆ 30 ಕೋಟಿ ರೂ. ಲಂಚದ ಆಮಿಷ ನೀಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಡಾ| ಸಿ.ಎನ್.ಆಶ್ವತ್ಥನಾರಾಯಣ ಸಹಿತ ಬಿಜೆಪಿ ನಾಯಕರ ವಿರುದ್ಧ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
ಇದೇ ವೇಳೆ ಆರೋಪಿತ ಜನಪ್ರತಿನಿಧಿಗಳ ವಿರುದ್ಧ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಸಿಕ್ಕ ಬಳಿಕ ಕಾನೂನು ಪ್ರಕ್ರಿಯೆ ಮುಂದುವರೆಸಲು ವಿಚಾರಣ ನ್ಯಾಯಾಲಯಕ್ಕೆ ನಿರ್ದೇಶಿಸಿದೆ. ಸಮನ್ಸ್ ರದ್ದಾಗಿರುವುದರಿಂದ ಸಚಿವರು ಹಾಗೂ ಶಾಸಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದರೂ, ಪ್ರಕರಣ ಮುಂದವರಿಸಲು ನಿರ್ದೇಶಿಸಿರುವುದರಿಂದ ಸಂಕಷ್ಟ ಮುಂದುವರಿದಂತಾಗಿದೆ.
ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ರದ್ದು ಕೋರಿ ಸಚಿವ ಅಶ್ವತ್ಥನಾರಾಯಣ, ಶಾಸಕರಾದ ಶ್ರೀನಿವಾಸ ಗೌಡ, ಎಸ್.ಆರ್. ವಿಶ್ವನಾಥ್, ಸಿ.ಪಿ ಯೋಗೇಶ್ವರ್ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಇದನ್ನೂ ಓದಿ:ದೇಶದಲ್ಲಿ ಹೆಚ್ಚಲಿದೆ ಆನ್ಲೈನ್ ಖರೀದಿ : 2025ರ ವೇಳೆಗೆ ಶೇ.17ಕ್ಕೆ ಏರಿಕೆ ಸಾಧ್ಯತೆ
ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಜನಪ್ರತಿನಿಧಿಗಳ ವಿರುದ್ಧ ಖಾಸಗಿ ದೂರು ದಾಖಲಿಸುವ ಮುನ್ನ ದೂರುದಾರರು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕಿತ್ತು. ಆದರೆ, ಪಿಸಿಆರ್ ದಾಖಲಿಸುವ ಮುನ್ನ ದೂರುದಾರರು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆದಿಲ್ಲ. ಹೀಗಾಗಿ, ವಿಚಾರಣ ನ್ಯಾಯಾಲಯ ಹೊರಡಿಸಿರುವ ಸಮನ್ಸ್ ನಿಯಮಾನುಸಾರ ಇಲ್ಲ ಎಂದು ಅಭಿಪ್ರಾಯಪಟ್ಟು ಸಮನ್ಸ್ ರದ್ದುಪಡಿಸಿದೆ.
ಅಲ್ಲದೆ, ಆರೋಪಿತ ಜನಪ್ರತಿನಿಧಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಪ್ರಕರಣ ಮುಂದುವರಿಸಲು ಸಕ್ಷಮ ಪ್ರಾಧಿಕಾರವಾದ ವಿಧಾನಸಭೆ ಸಭಾಧ್ಯಕ್ಷರಿಂದ ಪೂರ್ವಾನುಮತಿ ಪಡೆಯಲು ದೂರುದಾರ ಟಿ.ಜೆ. ಅಬ್ರಹಾಂ ಅವರಿಗೆ ನಿರ್ದೇಶಿಸಬೇಕು. ಪೂರ್ವಾನುಮತಿ ಸಿಕ್ಕ ಬಳಿಕ ಕಾನೂನು ಪ್ರಕ್ರಿಯೆಗಳನ್ನು ಮುಂದುವರಿಸುವಂತೆ ವಿಚಾರಣ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.