ಈಶ್ವರಪ್ಪ ವಿರುದ್ಧದ ದೂರಿಗೆ ಮರುಜೀವ
Team Udayavani, Dec 20, 2020, 10:44 PM IST
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಪ್ರಕರಣದಕ್ಕೆ ಸಂಬಂಧಿಸಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧದ ದೂರಿಗೆ ಹೈಕೋರ್ಟ್ ಮರು ಜೀವ ನೀಡಿದೆ. ಈ ಕುರಿತು ಶಿವಮೊಗ್ಗದ ವಕೀಲ ಬಿ. ವಿನೋದ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ, “ಈಶ್ವರಪ್ಪ ಅವರ ವಿರುದ್ಧದ ದೂರು ಮರುಸ್ಥಾಪನೆ’ ಮಾಡಬೇಕು ಎಂದು ಆದೇಶಿಸಿದೆ. ಇದರಿಂದಾಗಿ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ.
ದೂರು ಮರು ಸ್ಥಾಪನೆ ಸಂಬಂಧ ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯ ನೀಡಿದ್ದ ಆದೇಶ ರದ್ದುಗೊಳಿಸಿರುವ ಹೈಕೋರ್ಟ್, ದೂರನ್ನು ಮರು ಪರಿಗಣಿಸಲು ನಿರ್ದೇಶನ ನೀಡಿದೆ.
ಹಿಂದಿನ ಬಿಜೆಪಿ ಸರಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪನವರು ಅಪಾರ ಪ್ರಮಾಣದ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ಅರೋಪಿಸಿ ವಿನೋದ್ ಅವರು 2016ರಲ್ಲಿ ಲೋಕಾಯುಕ್ತ ಕೋರ್ಟ್ಗೆ ಖಾಸಗಿ ದೂರು ನೀಡಿದ್ದರು. ಆದರೆ, ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಹೇಳಿ ಲೋಕಾಯುಕ್ತ ನ್ಯಾಯಾಲಯ ದೂರು ಅರ್ಜಿ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ವಿನೋದ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.