ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ
Team Udayavani, Feb 16, 2020, 3:05 AM IST
ಬೆಂಗಳೂರು: ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಇಲಾಖೆಗೆ ಬಜೆಟ್ನಲ್ಲಿ ನಿಗದಿಯಾಗಿರುವ ಅನುದಾನ ಲ್ಯಾಪ್ಸ್ ಆಗಬಾರದು.
ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಯಾವುದೇ ಅನುದಾನ ಉಳಿಕೆಯಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಮುಖ್ಯ ಎಂಜಿನಿಯರುಗಳು ಕಾರ್ಯನಿರ್ವಾಹಕ ಅಭಿಯಂತರೊಂದಿಗೆ ನಿಯಮಿತವಾಗಿ ಸಭೆ ನಡೆಸಿ ಸಮಗ್ರವಾಗಿ ಚರ್ಚಿಸಬೇಕು. ಕಾಮಗಾರಿ ಸ್ಥಳ ಖುದ್ದು ವೀಕ್ಷಣೆ ಮಾಡಬೇಕು, ದೋಷವಿದ್ದರೆ ವರದಿ ಮಾಡಿ ಎಂದರು.
ರಾಷ್ಟ್ರೀಯ ಹೆದ್ದಾರಿ ಯೋಜನೆ ಘಟಕಕ್ಕೆ 341 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು 317 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕೆಆರ್ಡಿಸಿಎಲ್ಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು ಸೇ.100 ರಷ್ಟು ವೆಚ್ಚ ಮಾಡಲಾಗಿದೆ. ರಾಜ್ಯ ಹೆದ್ದಾರಿ ಘಟಕದಲ್ಲಿ 333 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು 333 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.