ಮನೆ ಮನೆಗೆ ಕಾಂಗ್ರೆಸ್: ಪರಿಶೀಲನೆಗೆ ಪ್ರವಾಸ
Team Udayavani, Oct 8, 2017, 11:52 AM IST
ಬೆಂಗಳೂರು: ರಾಜ್ಯ ಕಾಂಗ್ರೆಸ್ನ ಮಹತ್ವಾಕಾಂಕ್ಷಿ “ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಸ್ವತಃ ಪ್ರಗತಿ ಪರಿಶೀಲನೆಗೆ ಕ್ಷೇತ್ರಗಳಿಗೆ ತೆರಳಲು ನಿರ್ಧರಿಸಿದ್ದಾರೆ.
ಅಕ್ಟೋಬರ್ 15ರಿಂದ 3 ದಿನ ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ವಿಧಾನಸಭಾ ಕ್ಷೇತ್ರ ವಾರು ಪ್ರತ್ಯೇಕ ಸಭೆಗಳನ್ನು ನಡೆಸಲು ನಿರ್ಧರಿಸಿ ದ್ದಾರೆ. ಅ.15ರಂದು ಬೆಳಿಗ್ಗೆ 8.30ಕ್ಕೆ ತುಮಕೂರಿನಲ್ಲಿ ಜಿಲ್ಲಾ ಮುಖಂಡರ ಜತೆ ಸಭೆ ನಡೆಸಿ ನಂತರ, ಶಿರಾ, ತುಮಕೂರು ಗ್ರಾಮಾಂತರ ಕ್ಷೇತ್ರಗಳಲ್ಲಿ
ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಪ್ರಗತಿ ಬಗ್ಗೆ ನೇರವಾಗಿ ಸಾರ್ವಜನಿಕರನ್ನು ಭೇಟಿ ಮಾಡಿ ಚರ್ಚಿಸಲು ತೀರ್ಮಾನಿಸಿದ್ದಾರೆ. ನಂತರ ಚಿತ್ರದುರ್ಗ, ದಾವಣಗೆರೆ, ಹರಿಹರ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮದ ಪ್ರಗತಿ
ತಿಳಿದುಕೊಂಡು ಸಂಜೆ ಹಾವೇರಿ ಜಿಲ್ಲಾ ಮುಖಂಡರ ಸಭೆ ನಡೆಸಲಿದ್ದಾರೆ.
ಅ.16ರಂದು ಶಿಗ್ಗಾವಿ, ಕುಂದಗೋಳ, ಹುಬ್ಬಳ್ಳಿ ಪೂರ್ವ, ಧಾರವಾಡ, ಕಲಘಟಗಿ ಕ್ಷೇತ್ರಗಳಲ್ಲಿ ಸಂಚರಿಸಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಅನುಷ್ಠಾನ ಕುರಿತು ಮಾಹಿತಿ ಪಡೆದು ಅಂದು ರಾತ್ರಿ ಹುಬ್ಬಳ್ಳಿ ಧಾರವಾಡ ಜಿಲ್ಲಾ ಘಟಕದೊಂದಿಗೆ ಸಭೆ ನಡೆಸಲಿದ್ದಾರೆ. ಅ.17ರಂದು ಬೆಳಗಾವಿ ಜಿಲ್ಲೆಯ ಸವದತ್ತಿ, ಬೈಲಹೊಂಗಲ, ಕಿತ್ತೂರು ಕ್ಷೇತ್ರಗಳಲ್ಲಿ ಪ್ರಗತಿ ಪರಿಶೀಲನೆ ನಡೆಸಿ ನಂತರ ಹುಬ್ಬಳ್ಳಿ ಕೇಂದ್ರ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನೆ ನಡೆಸಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಶಾಸಕರಿಗೆ ವೇಣುಗೋಪಾಲ ತರಾಟೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಶುಕ್ರವಾರ ನಡೆದ ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ಶಾಸಕರನ್ನು ತರಾಟೆಗೆ ತೆಗೆ ದು ಕೊಂಡಿದ್ದಾರೆ ಎನ್ನುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಪಕ್ಷದ ಆದೇಶವನ್ನು ಪಾಲಿಸಲು ಆಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಕೆಲವು ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆಂದು ತಿಳಿದು ಬಂದಿದೆ. ಬೂತ್ ಕಮಿಟಿ ರಚನೆ ಹಾಗೂ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಅನುಷ್ಠಾನ ಮಾಡುವ ವಿಷಯದಲ್ಲಿ ವೇಣುಗೋಪಾಲ್ಗೆ ಮರು ಪ್ರಶ್ನೆ ಮಾಡಲು ಮುಂದಾಗಿದ್ದ ಶಾಸಕರನ್ನು ನೇರವಾಗಿಯೇ ತರಾಟೆಗೆ ತೆಗೆದುಕೊಂಡಿ ದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ನೀಡಿರುವ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು. ಪಕ್ಷದ ಬಲ ಇಲ್ಲದೇ ಗೆದ್ದು ಬರುತ್ತೇನೆ ಎನ್ನುವ ಧೈರ್ಯ ಇದ್ದರೆ ಪಕ್ಷೇತರರಾಗಿ ಸ್ಪರ್ಧಿಸಿ, ಪಕ್ಷಕ್ಕೆ ಯಾರೂ
ಅನಿವಾರ್ಯವಲ್ಲ ಎಂದು ನೇರವಾಗಿಯೇ ಎಲ್ಲರಿಗೂ ಪಾಠ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣ ಬಳಕೆ ಗೊತ್ತಿಲ್ಲ ಎನ್ನುವ ಶಾಸಕರಿಗೆ ಪ್ರತ್ಯೇಕ ಸಹಾಯಕರನ್ನು ನೇಮಿಸಿಕೊಂಡು ಜಾಲತಾಣಗಳನ್ನು ನಿರ್ವಹಣೆ ಮಾಡುವಂತೆಯೂ ಸೂಚಿಸಿದ್ದಾರೆ.
ಬೂತ್ ಕಮಿಟಿ ರಚನೆ ಹಾಗೂ ಮನೆ ಮನೆಗೂ ಕಾಂಗ್ರೆಸ್ ಕಾರ್ಯಕ್ರಮ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ ತೋರುವ ಶಾಸಕರಿಗೆ ಟಿಕೆಟ್ ದೊರೆಯುವುದು ಅನುಮಾನ ಎನ್ನುವ ಸಂದೇಶವನ್ನೂ ವೇಣುಗೋಪಾಲ ನೀಡಿದ್ದಾರೆ ಎಂದು ತಿಳಿದು ಬಂದಿದೆ.