ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಎಸ್ಎಸ್ಎಲ್ ಸಿ ಅಂಕವೂ ಪರಿಗಣನೆ: ಸುರೇಶ್ ಕುಮಾರ್
Team Udayavani, Jun 5, 2021, 10:57 AM IST
ಬೆಂಗಳೂರು: ಕೋವಿಡ್ ಕಾರಣದಿಂದ ಈ ಬಾರಿಯ ದ್ವಿತೀಯ ಪಿಯು ಅಂತಿಮ ವರ್ಷದ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಪ್ರಥಮ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಅಂಕ ನೀಡಲು ತೀರ್ಮಾನಿಸಲಾಗಿತ್ತು. ಇದೀಗ ಅದರೊಂದಿಗೆ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಡೆದ ಅಂಕವನ್ನೂ ಪರಿಗಣಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಇಂದಿನ ಸಂದರ್ಭದಲ್ಲಿ, ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು, ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್ಎಸ್ಎಲ್ ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಗತ ವೈಭವ ಪಡೆದೀತೆ ‘ದಿ ರಿಯಲ್ ಕ್ರಿಕೆಟ್’: ಟೆಸ್ಟ್ ಕ್ರಿಕೆಟ್ ನ ಭವಿಷ್ಯವೇನು?
ಈ ಬಗ್ಗೆ ಕರ್ನಾಟಕ ಪ್ರೌಢ ಶಿಕ್ಷಣಪರೀಕ್ಷಾ ಮಂಡಳಿಯ ವತಿಯಿಂದ ಅಂಕಿ ಅಂಶಗಳನ್ನು ಪಡೆದು, ಪ್ರಥಮ ಪಿಯು ಅಂಕಗಳೊಂದಿಗೆ ಸೂಕ್ತ ರೀತಿಯಲ್ಲಿ ಹೊಂದಿಸಿ ಜೂನ್ ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶಗಳನ್ನು ಘೋಷಿಸುವ ವ್ಯವಸ್ಥೆ ಮಾಡಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಫಲಿತಾಂಶವು ಯಾವುದೇ ವಿದ್ಯಾರ್ಥಿಗೆ ತೃಪ್ತಿ ನೀಡದೆ ಇದ್ದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದ ಬಳಿಕ ಇಲಾಖೆ ನಡೆಸುವ ಪರೀಕ್ಷೆಗೆ ಹಾಜರಾಗಬಹುದು. ಆದರೆ ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಶುಕ್ರವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.