ಜೆಡಿಎಸ್ ರಾಜ್ಯಾಧ್ಯಕ್ಷರಿಂದ ಜಿಲ್ಲಾವಾರು ಸಭೆ
Team Udayavani, Aug 17, 2019, 3:00 AM IST
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿಯವರು ಸೋಮವಾರದಿಂದ ಜಿಲ್ಲಾವಾರು ಜೆಡಿಎಸ್ ಮುಖಂಡರ ಸಭೆ ಕರೆದಿದ್ದಾರೆ. ಪಕ್ಷದ ಕಚೇರಿಯಲ್ಲಿ ಕರೆದಿರುವ ಸಭೆಯಲ್ಲಿ ಒಂದು ವಾರ ಕಾಲ ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿ, ರಾಜ್ಯ ಪ್ರವಾಸ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ.
ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಸಭೆಯಲ್ಲಿ ಹಾಜರಿರಲಿದ್ದಾರೆ ಎಂದು ಹೇಳಲಾಗಿದೆ. ಸೋಮವಾರದಿಂದ ಶನಿವಾರದವರೆಗೆ ನಡೆಯಲಿರುವ ಸಭೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ಬೀದರ್, ತುಮಕೂರು, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಮುಖಂಡರ ಜತೆ ಚರ್ಚಿಸಲಿದ್ದಾರೆ.