ಪಿಎಸ್ಐ ಅಕ್ರಮ ತನಿಖಾಧಿಕಾರಿಗಳು ಒತ್ತಡಕ್ಕೆ ಮಣಿಯುತ್ತಿದ್ದಾರೆ ಡಿಕೆಶಿ ಆರೋಪ
Team Udayavani, Jul 11, 2022, 7:30 PM IST
ಬೆಂಗಳೂರು: ಪಿಎಸ್ಐ ಅಕ್ರಮ ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು ಸರ್ಕಾರದ ಒತ್ತಡಕ್ಕೆ ಮಣಿದು ಪ್ರಬಲ ಅಧಿಕಾರಿ ಹಾಗೂ ರಾಜಕಾರಣಿಗಳಿಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪಿಎಸ್ಐ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ತನಿಖಾಧಿಕಾರಿಗಳು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಅವರ ಹೇಳಿಕೆ ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿಗಳೂ ಆಗಿದ್ದು, ತಮಗೆ ಬಂದಿರುವ ಮಾಹಿತಿ ಆಧಾರದ ಮೇಲೆ ಈ ಪ್ರಕರಣದಲ್ಲಿ ಸಚಿವರುಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ. ಈ ಪ್ರಕರಣದಲ್ಲಿ ನೆಪ ಮಾತ್ರಕ್ಕೆ ಕೆಲವರನ್ನು ಬಂಧಿಸಿದರೆ ಸಾಲುವುದಿಲ್ಲ. ಎಲ್ಲ ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಸೆಕ್ಷನ್ 164 ಪ್ರಕಾರ ಹೇಳಿಕೆ ದಾಖಲಿಸಿಕೊಳ್ಳಬೇಕು ಎಂದು ಹೇಳಿದರು.