ರಾಜ್ಯದಲ್ಲಿ 18 ವರ್ಷದಲ್ಲಿ 14 ವರ್ಷ ಸತತ ಬರ: ಸಚಿವ RVD
Team Udayavani, Mar 2, 2019, 12:30 AM IST
ಬೆಂಗಳೂರು: ರಾಜ್ಯದಲ್ಲಿ 18 ವರ್ಷಗಳಲ್ಲಿ 14 ವರ್ಷ ಸತತ ಬರ ಉಂಟಾಗಿದೆ. ಈ ವರ್ಷ ಮುಂಗಾರು ಹಂಗಾಮಿನಲ್ಲಿ ಪ್ರವಾಹ, ಭೂ ಕುಸಿತ, ಬರ, ಹಿಂಗಾರಿನಲ್ಲಿಯೂ ಮಳೆ ಕೊರತೆ ಬೆಳೆನಷ್ಟ ಸೇರಿ ಒಟ್ಟು 31,757 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಬರ, ಪ್ರವಾಹದಿಂದ ರಾಜ್ಯವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಹೀಗಾಗಿ,ಕೇಂದ್ರ ಸರ್ಕಾರ ನೆರವಿಗೆ ಬರಲೇಬೇಕೆಂದು ಆಗ್ರಹಿಸಿದರು. ರಾಜ್ಯ ಸರ್ಕಾರವು ಬರ ನಿರ್ವಹಣೆ ಕಾಮಗಾರಿ ಸಮರ್ಪಕವಾಗಿ ಕೈಗೊಂಡಿದೆ. ಬರ ನಿರ್ವಹಣೆಗೆ ಹಣಕಾಸಿನ ಕೊರತೆಯಿಲ್ಲ. ಈ ದಿನಕ್ಕೆ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 647.28 ಕೋಟಿ ರೂ. ಹಣ ಇದೆ ಎಂದರು.
ಕುಡಿಯುವ ನೀರಿಗೆ ಆದ್ಯತೆ ನೀಡಲು ಡೀಸಿಗಳಿಗೆ ನಿರ್ದೇಶಿಸಲಾಗಿದೆ. ರಾಜ್ಯದ 19 ಜಿಲ್ಲೆಗಳ 377 ಗ್ರಾಮಗಳಲ್ಲಿ 706 ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.
431 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು 401 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಟಾಸ್ಕ್ ಫೋರ್ಸ್ ಮೂಲಕ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳುವ ಸಲುವಾಗಿ ಗ್ರಾಮೀಣಾಭಿವೃದಿಟಛಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಬರಪೀಡಿತ ತಾಲೂಕುಗಳಿಗೆ ತಲಾ 1 ಕೋಟಿ ರೂ. ಬಿಡುಗಡೆ ಮಾಡಿದೆ. ಬರ ಪೀಡಿತ ಎಂದು ಘೋಷಿಸದ ತಾಲೂಕುಗಳಿಗೆ 25 ಲಕ್ಷ ರೂ. ಬಿಡುಗಡೆ ಮಾಡಿದೆ ಎಂದು ವಿವರಿಸಿದರು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ವಾರ್ಡ್ಗಳಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿರುವ ಹಿನ್ನೆಲೆಯಲ್ಲಿ ನಗರಾಭಿವೃದಿಟಛಿ ಇಲಾಖೆ ವತಿಯಿಂದ 50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು. ಮೇವು ಕಿಟ್ ಖರೀದಿಗಾಗಿ 25 ಕೋಟಿ ರೂ. ಬಿಡುಗಡೆ ಮಾಡಿದ್ದು 8.11 ಲಕ್ಷ ಮೇವು ಕಿಟ್ ವಿತರಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
2064.30 ಕೋಟಿ ರೂ. ಪರಿಹಾರ ಕೋರಿಕೆ
ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ ಉಂಟಾಗಿರುವ ಕೃಷಿ ಹಾಗೂ ತೋಟಗಾರಿಕೆ ಬೆಳೆನಷ್ಟಕ್ಕೆ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ನಡಿ 2064.30 ಕೋಟಿ ರೂ. ನೆರವು ನೀಡುವಂತೆ ಮನವಿ ಮಾಡಲಾಗಿದ್ದು, ಕೇಂದ್ರ ತಂಡಕ್ಕೆ ಬರದಿಂದ ಉಂಟಾಗಿರುವ ಪರಿಸ್ಥಿತಿ ಮನವರಿಕೆ ಮಾಡಿಕೊಡಲಾಗಿದೆ ಎಂದು ಸಚಿವ ದೇಶಪಾಂಡೆ ತಿಳಿಸಿದ್ದಾರೆ. ಬರಪೀಡಿತ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೇಂದ್ರ ತಂಡದ ಜತೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಾ.ಅಭಿಷೇಕ್ ನೇತೃತ್ವದ 9 ಅಧಿಕಾರಿಗಳ 3 ತಂಡ ರಾಜ್ಯದ 14 ಜಿಲ್ಲೆಗಳಿಗೆ ಎರಡು ದಿನಗ ಕಾಲ ಭೇಟಿ ನೀಡಿ ಪರಿಶೀಲಿಸಿ ರೈತರು, ಕೂಲಿ ಕಾರ್ಮಿಕರ ಮನವಿ ಆಲಿಸಿದ್ದು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದಿದೆ. ನಾವೂ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು.
ಮುಂಗಾರು ಹಂಗಾಮಿನಲ್ಲಿ 100 ತಾಲೂಕು ಬರಪೀಡಿತ ಎಂದು ಘೋಷಿಸಿ ಕೇಂದ್ರದಿಂದ
2,434 ಕೋಟಿ ರೂ. ಕೋರಲಾಗಿದ್ದು 949.44 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ. ಆದರೆ, ಇನ್ನೂ ಹಣ ಬಂದಿಲ್ಲ. ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಒತ್ತಾಯಿಸುವುದಾಗಿ ಹೇಳಿದರು.