ವಿದ್ಯುತ್ ಕಂಪನಿ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸಮಿತಿ ರಚನೆ: ಡಿಕೆಶಿ
Team Udayavani, Jul 16, 2017, 3:45 AM IST
ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸಮಿತಿ ರಚಿಸಲಾಗಿದೆ. ವರದಿ ಬಂದ
ತಕ್ಷಣ ಜಾರಿಗೊಳಿಸಲಾಗುವುದೆಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ಶನಿವಾರ ರಾಜ್ಯ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ನೌಕರರ ಸಂಘದ 20ನೇ ತ್ತೈ ಮಾಸಿಕ ಮಹಾಧಿವೇಶನ ಉದ್ಘಾಟಿಸಿ ಮಾತನಾಡಿದರು. “ವಿದ್ಯುತ್ ಸರಬರಾಜು ಕಂಪನಿಗಳನ್ನು ಖಾಸಗೀಕರಣ ಮಾಡುವಂತೆ ಹಲವು ಸಲಹೆಗಳು ಬರುತ್ತಿವೆ. ಆದರೆ, ನನ್ನ ಅಧಿಕಾರಾವಧಿಯಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಕಂಪನಿಗಳ ಖಾಸಗೀಕರಣಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
ಇಂಧನ ಇಲಾಖೆಯಲ್ಲಿ ಖಾಲಿಯಿರುವ 8ರಿಂದ 9 ಸಾವಿರ ಹುದ್ದೆಗಳನ್ನು ಮುಂದಿನ ಎರಡು ತಿಂಗಳಲ್ಲಿ ಭರ್ತಿ ಮಾಡಲಾಗುವುದು. ಪ್ರೊಬೆಷನರಿ ಅವಧಿಯಲ್ಲಿ ಮೃತ ಸಿಬ್ಬಂದಿ ಕುಟುಂಬಕ್ಕೆ ಉದ್ಯೋಗ ನೀಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು. ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಆಗಸ್ಟ್ನಲ್ಲಿ ಸನ್ಮಾನಿಸಲಾಗುವುದೆಂದು ತಿಳಿಸಿದರು.