ಇಂದಿರಾ ಕ್ಯಾಂಟೀನ್ ಬದಲಾಯಿಸಿದರೆ ಹೋರಾಟ
Team Udayavani, Aug 6, 2019, 3:00 AM IST
ಬೆಂಗಳೂರು: ಇಂದಿರಾ ಕ್ಯಾಂಟೀನ್ ಮುಚ್ಚುವುದು ಅಥವಾ ಹೆಸರು ಬದಲಾವಣೆ ಮಾಡುವ ಬಗ್ಗೆ ಬಿಜೆಪಿ ಚಿಂತನೆ ನಡೆಸುತ್ತಿರುವ ವರದಿಗಳು ಬರುತ್ತಿವೆ. ಆ ರೀತಿ ಮಾಡಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸರ್ಕಾರದ ಮಟ್ಟದಲ್ಲಿ ಆ ರೀತಿಯ ಚರ್ಚೆ ಆಗಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಬಿಜೆಪಿಯವರು ಆ ರೀತಿ ಮಾತನಾಡಿಕೊಳ್ಳುತ್ತಿದ್ದಾರೆ. ನನಗೆ ಗೊತ್ತಿರುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಕೆಲಸಕ್ಕೆ ಕೈ ಹಾಕುವುದಿಲ್ಲ.
ಒಂದೊಮ್ಮೆ ಅಂತಹ ತೀರ್ಮಾನ ಕೈಗೊಂಡರೆ ನಮ್ಮ ವಿರೋಧವಿದೆ ಎಂದು ಹೇಳಿದರು.ಇಂದಿರಾಕ್ಯಾಂಟೀನ್ ಈಗಾಗಲೇ ಬಡವರ ಪಾಲಿಗೆ ವರವಾಗಿದೆ. ಅದರಿಂದ ಸಾಕಷ್ಟು ಜನರಿಗೆ ಉಪಯೋಗವಾಗುತ್ತಿದೆ. ಅದಕ್ಕೆ ಅನ್ನಪೂರ್ಣ ಎಂದು ಹೆಸರು ಬದಲಾಯಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು. ಹಾಗೆ ಮಾಡಿದರೆ ನಾವು ಹೋರಾಟ ಮಾಡುತ್ತೇವೆ ಎಂದರು.