ಬಿಎಸ್ವೈ ಸೇರಿ 9 ಮಂದಿ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್
Team Udayavani, Sep 18, 2022, 7:10 AM IST
ಬೆಂಗಳೂರು: ಬಿಡಿಎ ವಸತಿ ಯೋಜನೆಯ ಗುತ್ತಿಗೆ ನೀಡುವ ಸಂಬಂಧ ಲಂಚ ಪಡೆದ ಆರೋಪದ ಮೇಲೆ ನ್ಯಾಯಾಲಯದ ಸೂಚನೆ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ 9 ಮಂದಿ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿ.ಎಸ್.ವಿಜಯೇಂದ್ರ, ಶಶಿಧರ್ ಮರಡಿ, ಸಂಜಯ್, ಗುತ್ತಿಗೆದಾರ ಚಂದ್ರಕಾಂತ ರಾಮಲಿಂಗಮ್, ಶಾಸಕ ಎಸ್.ಟಿ. ಸೋಮಶೇಖರ್, ರೀಜಿನಲ್ ಕಮೀಷನರ್ ಡಾ.ಜಿ.ಸಿ.ಪ್ರಕಾಶ್, ಕೆ.ರವಿ. ವಿರೂಪಾಕ್ಷ ಯಮಕನಮರಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ತನಿಖೆ ಆರಂಭಿಸಲಿರುವ ಲೋಕಾಯುಕ್ತ ಪೊಲೀಸರು ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧದ ಆರೋಪಕ್ಕೆ ಸೂಕ್ತ ಸಾಕ್ಷ್ಯ ಸಿಕ್ಕಿದರೆ ವಿಚಾರಣೆ ನಡೆಸುವ ಸಾಧ್ಯತೆಗಳಿವೆ.
ಏನಿದು ಪ್ರಕರಣ?: ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪೆನಿಗೆ ಬಿಡಿಎ ವಸತಿ ಯೋಜನೆಗೆ ಸಂಬಂಧಿಸಿದಂತೆ ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಇದರ ಅನ್ವಯ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣ ದಾಖಲಿಕೊಂಡು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿತ್ತು. ಸೆ.16ರಂದು ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.