ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ : ಸಚಿವ ರಮೇಶ ಜಾರಕಿಹೊಳಿ
Team Udayavani, Jul 27, 2020, 2:49 PM IST
ಬೆಳಗಾವಿ: ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಯಾಗಿ ಇರುತ್ತಾರೆ. 2023 ವಿಧಾನಸಭೆ ಚುನಾವಣೆ ಕೂಡ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ರಚನೆಯಾಗಿ ಒಂದು ವರ್ಷ ಪೂರೈಸಿದೆ ಅದಕ್ಕೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಶೇಷ ಸಮಯದಲ್ಲಿ ರಾಜ್ಯದಲ್ಲಿ ಅಧಿಕಾರ ಹಿಡಿದು ಸಾಲು ಸಾಲು ಸಮಸ್ಯೆ ಎದುರಿಸಿ ಜನರ ಸಂಕಷ್ಟಗಳನ್ನು ದೂರ ಮಾಡಿ ಜನರ ಮನಸ್ಸು ಗೆದ್ದಿದ್ದಾರೆ ಎಂದರು. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ. ಅಂತಹ ಬೆಳವಣಿಗೆ ಸಹ ನಡೆದಿಲ್ಲ. ಎಲ್ಲವೂ ಊಹಾಪೋಹಗಳು ಎಂದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ನನ್ನ ಭೇಟಿ ವಿಶೇಷ ಏನಿಲ್ಲ, ಅವರು ನಮ್ಮ ಪಕ್ಷದ ನಾಯಕರು ಎಂದು ರಮೇಶ ಜಾರಕಿಹೊಳಿ ಹೇಳಿದರು.
ಡಿಸಿಎಂ ಲಕ್ಷ್ಮಣ ಸವದಿ ಅವರು ತಮ್ಮ ಇಲಾಖೆಯ ವಿಚಾರವಾಗಿ ಕೇಂದ್ರ ಸಚಿವ ನಿತೀನ್ ಗಡ್ಕರ್ ಭೇಟಿ ಮಾಡಲು ದೆಹಲಿಗೆ ಹೋಗಿದ್ದಾರೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದರು.