ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂಗೆ ಮನವಿ
Team Udayavani, Sep 10, 2019, 3:00 AM IST
ಬೆಂಗಳೂರು: ಗಾಣಿಗ ಸಮಾಜದ ಅಭಿವೃದ್ಧಿಗಾಗಿ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಸಮಾಜದ ಮುಖಂಡರು ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಗಾಣಿಗ ಹೋರಾಟ ಸಮಿತಿ ವತಿಯಿಂದ ರಾಜ್ಯಾಧ್ಯಕ್ಷ ಗುರಣ್ಣ ಗೋಡಿ ನೇತೃತ್ವದಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಗಾಣಿಗ ಸಮಾಜ ರಾಜ್ಯದಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಡುತ್ತಿದ್ದು, ಬಹುತೇಕರು ಸಣ್ಣ ವ್ಯಾಪಾರ ಹಾಗೂ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ.
ಔದ್ಯೋಗಿಕರಣ ಹಾಗೂ ಜಾಗತೀಕರಣದಿಂದಾಗಿ ಅಂತಾರಾಷ್ಟ್ರೀಯ ಕಂಪನಿಗಳು ಎಣ್ಣೆ ಗಾಣ ಕ್ಷೇತ್ರದಲ್ಲಿ ತಮ್ಮದೇ ಆದ ಸಾಮ್ರಾಜ್ಯ ಸ್ಥಾಪಿಸಿಕೊಂಡಿವೆ. ದೊಡ್ಡ ಕಂಪನಿಗಳ ವಿರುದ್ಧ ಪೈಪೋಟಿ ಮಾಡಲಾಗದೆ ಎಣ್ಣೆ ಗಾಣಗಳು ಮೂಲೆಗುಂಪಾಗಿವೆ. ಎಲ್.ಜಿ. ಹಾವನೂರ್, ಚಿನ್ನಪ್ಪ ರೆಡ್ಡಿ ಆಯೋಗಗಳು ಗಾಣಿಗ ಸಮುದಾಯವನ್ನು 2ಎ ಪ್ರವರ್ಗಕ್ಕೆ ಸೇರಿಸಿದ್ದರೂ, ಶೈಕ್ಷಣಿಕವಾಗಿ, ರಾಜಕೀಯವಾಗಿ ಸಮುದಾಯ ಹಿಂದುಳಿದಿದೆ. ಹೀಗಾಗಿ ಗಾಣಿಗ ಸಮುದಾಯದ ಏಳಿಗೆಗೆ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಮನವಿ ಮಾಡಿದ್ದಾರೆ.