ಖಾಸಗಿ ಹೋಟೆಲ್, ಹಜ್ ಭವನದಲ್ಲಿ ಕೋವಿಡ್ -19 ಚಿಕಿತ್ಸೆ ನೀಡಲು ಮುಂದಾದ ಸರ್ಕಾರ
Team Udayavani, Jun 25, 2020, 4:40 PM IST
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ಲಕ್ಷಣ ಇಲ್ಲದೇ ಇರುವವರಿಗೆ ನಗರದ ಖಾಸಗಿ ಹೋಟೆಲ್ ಗಳು ಮತ್ತು ಹಜ್ ಭವನದಲ್ಲಿ ಚಿಕಿತ್ಸೆ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.
ನಗರದಲ್ಲಿ ಕೋವಿಡ್ 19 ಪರಿಸ್ಥಿತಿ ಪರಿಶೀಲನೆ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಸಭೆ ನಡೆಸಿದರು.
ನಗರದಲ್ಲಿ ಹೆಚ್ಚುತ್ತಿರುವ ಪ್ರಕರಣಗಳಿಗೆ ತಕ್ಕಂತೆ ಹಾಸಿಗೆಗಳ ಲಭ್ಯತೆಯನ್ನು ಖಾತರಿ ಪಡಿಸುವ ನಿಟ್ಟಿನಲ್ಲಿ, ರೋಗ ಲಕ್ಷಣ ಕಡಿಮೆ ಇರುವವರಿಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಹಾಗೂ ರೋಗ ಲಕ್ಷಣ ಇಲ್ಲದವರಿಗೆ ಖಾಸಗಿ ಹೋಟೆಲ್ ಗಳು ಹಾಗೂ ಹಜ್ ಭವನದಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಯಿತು.
ಕೋವಿಡ್ ರೋಗಿಗಳು ಆಸ್ಪತ್ರೆಗೆ ದಾಖಲಾಗಲು ಕಾಯುವ ಪರಿಸ್ಥಿತಿ ಬರಬಾರದು. ಪರೀಕ್ಷಾ ವರದಿ ಬಂದು ಸೋಂಕು ದೃಢಪಟ್ಟ ನಂತರ ತ್ವರಿತವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಕ್ರಮ ವಹಿಸಲು ಸೂಚಿಸಲಾಯಿತು. ಇದಕ್ಕಾಗಿ ಈಗ 100 ಅಂಬ್ಯುಲೆನ್ಸ್ ಗಳು ಲಭ್ಯವಿದ್ದು, ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಅಂಬ್ಯುಲೆನ್ಸ್ ಗಳನ್ನು ಈ ಉದ್ದೇಶಕ್ಕೆ ಬಳಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ ಕೋವಿಡ್ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸಚಿವರಿಗೆ ಸೂಚಿಸಲಾಗಿದೆ. ಹಾಸಿಗೆಗಳ ಲಭ್ಯತೆ ಕುರಿತು, ಪ್ರತಿ ರೋಗಿಯ ದಾಖಲಿಸುವ ಕುರಿತು ಕ್ಷಣ ಕ್ಷಣದ ಮಾಹಿತಿ ಒದಗಿಸುವ ಕುರಿತು ಡಿಜಿಟಲ್ ಪ್ಲಾಟ್ ಫಾರ್ಮ್ ಸೃ಼ಜಿಸಲು ಇಂದು ನಿರ್ಧರಿಸಲಾಯಿತು.
ನಾಳೆ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಸಚಿವರು, ಶಾಸಕರ ಸಭೆ ಕರೆಯಲಾಗಿದ್ದು, ಮುಂದಿನ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ.