7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರ್ಕಾರ
Team Udayavani, Jul 18, 2022, 10:08 PM IST
ಬೆಂಗಳೂರು: ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮಹಾಂತೇಶ್ ಬೀಳಗಿ ಅವರನ್ನು ನೇಮಿಸಿದೆ.
ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪಿ.ರಾಜೇಂದ್ರ ಚೋಳನ್ ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿ., ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಆಗಿದ್ದಾರೆ.
ಕೆ. ಶ್ರೀನಿವಾಸ್ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತೆ (ಹಣಕಾಸು) ಆಗಿದ್ದ ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಅದೇ ರೀತಿ, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜುಗಳ ನಿಗಮ ನಿಯಮಿತ (ಕೆಎಸ್ಎಂಎಸ್ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎನ್.ಎಂ. ನಾಗರಾಜ ಅವರನ್ನು ಚಿಕ್ಕಬಳ್ಳಾಪುರ ಡೀಸಿಯಾಗಿ ಹಾಗೂ ಕೊಪ್ಪಳ ಡೀಸಿಯಾಗಿ ಎಂ. ಸುಂದರೇಶ್ ಬಾಬು ವರ್ಗಾವಣೆಗೊಂಡಿದ್ದಾರೆ.
ರಾಹುಲ್ ರತ್ನಂ ಪಾಂಡೆ ಅವರನ್ನು ಕೃಷ್ಣಾ ಮೇಲ್ದಂಡೆ ಯೋಜನೆಯ ಪರಿಹಾರ ಮತ್ತು ಪುನರ್ವಸತಿ ಹಾಗೂ ಭೂಸ್ವಾಧೀನ ವಿಭಾಗದ ಪ್ರಧಾನ ವ್ಯವಸ್ಥಾಪಕರನ್ನಾಗಿ ವರ್ಗಾವಣೆ ಮಾಡಲಾಗಿದೆ.