‘ಮುಖ್ಯಮಂತ್ರಿಗಳದ್ದು ಹೈ-ಫೈ ಗ್ರಾಮ ವಾಸ್ತವ್ಯ’
Team Udayavani, Jun 28, 2019, 5:15 AM IST
ಬೆಂಗಳೂರು: ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಸತ್ತು ಹೋಗಿದೆ. ಒಂದು ವರ್ಷದಿಂದ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಮಲಗಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಇದೀಗ ಹೈ-ಫೈ ಗ್ರಾಮ ವಾಸ್ತವ್ಯ ಶುರು ಮಾಡಿದ್ದಾರೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.
ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕುಮಾರಸ್ವಾಮಿ ನೇತೃತ್ವದ ಭ್ರಷ್ಟ ಸರ್ಕಾರ ಅಸ್ತಿತ್ವಕ್ಕೆ ಬಂದು 13 ತಿಂಗಳು ಕಳೆದಿದೆ. ನಾಲ್ಕು ಜಿಲ್ಲೆಗಳಿಗೆ ಸೀಮಿತವಾಗಿ ಕೆಲಸ ಕಾರ್ಯ ನಡೆಯುತ್ತಿದ್ದು, ಸರ್ಕಾರದ ವರ್ಚಸ್ಸು ಕುಂದಿರುವುದು ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ಸರ್ಕಾರಕ್ಕೆ ಜನ ಶಾಪ ಹಾಕುತ್ತಿದ್ದಾರೆ ಎಂದು ಕಿಡಿ ಕಾರಿದರು.
ನೇಣಿಗೆ ಹಾಕಲಿ: ಕೆಲವರು ತಾವಿರುವುದೇ ಅಲ್ಪಸಂಖ್ಯಾತರ ಹಿತ ರಕ್ಷಣೆಗೆ ಎಂದು ಹೇಳಿಕೊಳ್ಳುತ್ತಿದ್ದರು. ಐಎಂಎ ಪ್ರಕರಣದಲ್ಲಿ ಸಾಕಷ್ಟು ಅಮಾಯಕರು ಹಣ ತೊಡಗಿಸಿ ಕಳೆದುಕೊಂಡಿದ್ದಾರೆ. ಇದರಲ್ಲಿ ಶಾಮೀಲಾಗಿರುವವರನ್ನು ಮೊದಲು ನೇಣಿಗೆ ಹಾಕಲಿ ಎಂದು ಹೇಳಿದರು.