High Court: 632 ಪಿಯು ಕಾಲೇಜುಗಳ ಬಗ್ಗೆ ಸಮಗ್ರ ವರದಿ ಕೇಳಿದ ಹೈಕೋರ್ಟ್
Team Udayavani, Jun 2, 2023, 6:40 AM IST
ಬೆಂಗಳೂರು: ನಿರ್ದಿಷ್ಟ ಭೌಗೋಳಿಕ ವಿಸ್ತೀರ್ಣ ಸೇರಿ ಬೇರೆ ಅಗತ್ಯತೆಗಳನ್ನು ಪೂರೈಸದೆ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ 2013ರಲ್ಲಿ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಉಲ್ಲೇಖೀಸಿರುವ 632 ಪಿಯು ಕಾಲೇಜುಗಳ ಈಗಿನ ಸ್ಥಿತಿಗತಿಗಳ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಚೌಗಲೆ ಶಿಕ್ಷಣ ಸಂಸ್ಥೆಗೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಪಿಯು ಕಾಲೇಜು ಕಟ್ಟಡ ನಿರ್ಮಾಣಕ್ಕೆ ನೀಡಿರುವ ಅನುಮತಿ ರದ್ದುಪಡಿಸಬೇಕೆಂದು ಸ್ಥಳೀಯ ನಿವಾಸಿ ಚಂದ್ರಶೇಖರ್ ಎಂ.ಅರಮನಿ ಹಾಗೂ ಇತರರು 2009ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಹಾಗೂ ನ್ಯಾ. ಎಂ.ಜಿ.ಎಸ್. ಕಮಾಲ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ವಾದ ಆಲಿಸಿದ ನ್ಯಾಯಪೀಠ, “ಕರ್ನಾಟಕ ಪದವಿಪೂರ್ವ ಶಿಕ್ಷಣ (ಶೈಕ್ಷಣಿಕ, ನೋಂದಣಿ, ಪ್ರವೇಶ ಮತ್ತು ಅನುದಾನ) ನಿಯಮಗಳು-2006ಕ್ಕೆ 2018ರಲ್ಲಿ ತಿದ್ದುಪಡಿ ತಂದಿರುವ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ. 2013ರ ಜುಲೈ 8ರಂದು ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ರಾಜ್ಯದಲ್ಲಿ 632 ಪಿಯು ಕಾಲೇಜುಗಳು ನಿಯಮದಂತೆ ನಿರ್ದಿಷ್ಟ ಭೌಗೋಳಿಕ ವಿಸ್ತೀìಣ ಸೇರಿ ಇತರ ಅಗತ್ಯತೆಗಳನ್ನು ಪೂರೈಸಿಲ್ಲ ಎಂದು ಸೂಚ್ಯವಾಗಿ ಹೇಳಲಾಗಿದೆ. ಹೀಗಿದ್ದಾಗ, ಆ 632 ಕಾಲೇಜುಗಳಿಗೆ ಶಿಕ್ಷಣ ಇಲಾಖೆ ನೀಡಿರುವ ನೋಟಿಸ್ಗೆ ಕಾಲೇಜುಗಳ ಕೊಟ್ಟ ವಿವರಣೆ ಏನು? ಅದು ಸರ್ಕಾರಕ್ಕೆ ಸಮಾಧಾನ ತಂದಿದೆಯೇ? ಸಮಾಧಾನ ತಂದಿಲ್ಲ ಎಂದಾದರೆ ಕಾಲೇಜುಗಳ ವಿರುದ್ಧ ಕೈಗೊಂಡ ಕ್ರಮಗಳೇನು ಎಂಬ ಸಮಗ್ರವಾದ ವರದಿಯನ್ನು ಮೂರು ವಾರಗಳಲ್ಲಿ ಸಲ್ಲಿಸಬೇಕೆಂದು ನಿರ್ದೇಶನ ನೀಡಿತು.
ಅಲ್ಲದೇ, 2018ರಲ್ಲಿ ಜಾರಿಗೆ ಬಂದಿರುವ “ಕರ್ನಾಟಕ ಪದವಿಪೂರ್ವ ಶಿಕ್ಷಣ (ಶೈಕ್ಷಣಿಕ, ನೋಂದಣಿ, ಪ್ರವೇಶ ಮತ್ತು ಅನುದಾನ) ತಿದ್ದುಪಡಿ ನಿಯಮಗಳು-2017′ ಪ್ರಕಾರ ಕಾಲೇಜುಗಳು ಸಲ್ಲಿಸಿದ ವರದಿ ಆಧರಿಸಿ ಪರಿಶೀಲನೆ ನಡೆಸುವ ಅವಕಾಶವಿದೆಯೇ, ಒಂದೊಮ್ಮೆ ಅವಕಾಶವಿದ್ದರೆ ವರದಿಗಳನ್ನು ಆಧರಿಸಿ ಕ್ರಮ ಕೈಗೊಳ್ಳಲು ನಿಯಮಗಳಲ್ಲಿ ಅವಕಾಶವಿದೆಯೇ ಎಂಬ ಬಗ್ಗೆಯೂ ವರದಿ ನೀಡುವಂತೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಅರ್ಜಿಯಲ್ಲಿ ಪ್ರಶ್ನಿಸಲಾಗಿರುವ ಚೌಗಲೆ ಶಿಕ್ಷಣ ಸಂಸ್ಥೆಯ ಪಿಯು ಕಾಲೇಜನ್ನು ಬೇರೆ ಕಡೆ ಸ್ಥಳಾಂತರಿಸಲಾಗಿದೆ ಎಂದು ಕಾಲೇಜು ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಅಲ್ಲದೇ ಅರ್ಜಿಯಲ್ಲಿ ನಂತರ ಸೇರ್ಪಡೆಯಾದ ಬೆಂಗಳೂರಿನ ಮಾಡರ್ನ್ ಪಿಯು ಕಾಂಪೋಸಿಟ್ ಕಾಲೇಜು ಪರ ವಕೀಲ ಜಿ.ಆರ್. ಮೋಹನ್ ವಾದ ಮಂಡಿಸಿ, ನಮ್ಮ ಕಕ್ಷಿದಾರರ ಕಾಲೇಜು 2004ರಲ್ಲಿ ಸ್ಥಾಪನೆಗೊಂಡಿದೆ. ನಿಯಮಗಳು ಮೊದಲು 2006ರಲ್ಲಿ ಜಾರಿಗೆ ಬಂದು, ನಂತರ 2018ರಲ್ಲಿ ತಿದ್ದುಪಡಿಗೊಂಡಿವೆ. ನಿಯಮಗಳು ಜಾರಿಗೆ ಬರುವ ಮುನ್ನ ನಮ್ಮ ಕಾಲೇಜು ಸ್ಥಾಪನೆಗೊಂಡಿರುವುದರಿಂದ ಹೊಸ ನಿಯಮಗಳು ನಮ್ಮ ಕಕ್ಷಿದಾದರಿಗೆ ಅನ್ವಯವಾಗುವುದಿಲ್ಲ ಎಂದು ಮನವರಿಕೆ ಮಾಡಿಕೊಟ್ಟರು. ಈ ಎರಡೂ ವಿಚಾರಗಳನ್ನು ನ್ಯಾಯಪೀಠ ದಾಖಲಿಸಿಕೊಂಡಿತು.