High Court of Karnataka; ಕೊಡವರಿಗೆ ಪ್ರತ್ಯೇಕ ಸ್ಥಾನಮಾನ ಕೋರಿದ ಅರ್ಜಿ
ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್ ನೋಟಿಸ್
Team Udayavani, Apr 18, 2023, 7:40 AM IST
ಬೆಂಗಳೂರು: ಕೊಡವರಿಗೆ ಪ್ರತ್ಯೇಕ ಸ್ಥಾನಮಾನ ನೀಡುವಂತೆ ಕೋರಿ ಕೊಡವ ನ್ಯಾಶನಲ್ ಕೌನ್ಸಿಲ್ (ಸಿಎನ್ಸಿ) ಸಲ್ಲಿಸಿರುವ ಮನವಿಗಳನ್ನು ಪರಿಗಣಿಸುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕೊಡವರಿಗೆ ಪ್ರತ್ಯೇಕ ಸ್ಥಾನಮಾನ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಸಲ್ಲಿಸಿರುವ ಮನವಿಗಳನ್ನು ಪರಿಗಣಿಸುವಂತೆ ನಿರ್ದೇಶನ ನೀಡಲು ಕೋರಿ ಬಿಜೆಪಿ ಮುಖಂಡ ಹಾಗೂ ರಾಜ್ಯಸಭಾ ಸದಸ್ಯರೂ ಆದ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಲೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಾಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಅರ್ಜಿ ಆಲಿಸಿದ ನ್ಯಾಯಪೀಠ, ಕೇಂದ್ರ ಕಾನೂನು ಸಚಿವಾಲಯ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಜೂ. 14ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಖುದ್ದು ಸುಬ್ರಹ್ಮಣಿಯನ್ ಸ್ವಾಮಿ ಹಾಜರಾಗಿ, ಕೊಡವ ನ್ಯಾಶನಲ್ ಕೌನ್ಸಿಲ್ (ಸಿಎನ್ಸಿ) ಅವರು ಕೊಡವರಿಗೆ ಪ್ರತ್ಯೇಕ ಸ್ಥಾನಮಾನ ನೀಡುವಂತೆ ಕೋರಿ ಮನವಿ ಮಾಡಿ¨ªಾರೆ, ಆದರೆ, ಸರಕಾರ ಈವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಬಗ್ಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯ ಪೀಠ, ಕೊಡವ ನ್ಯಾಶನಲ್ ಕೌನ್ಸಿಲ್ ಅನ್ನು ಅರ್ಜಿಯಲ್ಲಿ ಪಕ್ಷಗಾರ ರನ್ನಾಗಿ ಮಾಡಲಾಗಿದೆಯೇ ಎದು ಪ್ರಶ್ನಿಸಿತು. ಪ್ರತಿವಾದಿಯನ್ನಾಗಿ ಮಾಡಲಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ತಿಳಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯ ಪೀಠ, ಕೊಡವರಿಗೆ ಪ್ರತ್ಯೇಕ ಸ್ಥಾನಮಾನಕ್ಕಾಗಿ ಕೊಡವ ನ್ಯಾಶನಲ್ ಕೌನ್ಸಿಲ್ ಮನವಿ ಸಲ್ಲಿಸಿದೆ. ಆ ಸಂಸ್ಥೆಗೆ ಕೊಡವ ಜನಾಂಗಕ್ಕೆ ಸೇರಿದ ಸಂಪ್ರದಾಯಗಳು, ಕೊಡವ ಪದ್ದತಿಗಳು ಹೆಚ್ಚು ತಿಳಿದಿರುತ್ತವೆ. ಅವರನ್ನು ಅರ್ಜಿದಾರರನ್ನಾಗಿ ಮಾಡಿ ಎಂದು ಸಲಹೆ ನೀಡಿತು. ಇದಕ್ಕೆ ಒಪ್ಪಿಗೆ ನೀಡಿದ ಅರ್ಜಿ ದಾರ ಸುಬ್ರಮಣಿಯನ್ ಸ್ವಾಮಿ, ಅರ್ಜಿಯನ್ನು ತಿದ್ದುಪಡಿ ಮಾಡುವುದಾಗಿ ತಿಳಿಸಿದರು. ಈ ಅಂಶ ದಾಖಲಿಸಿ ಕೊಂಡ ನ್ಯಾಯಪೀಠ, ಮಂಗಳವಾರ ದೊಳಗೆ ಅರ್ಜಿ ತಿದ್ದುಪಡಿ ಮಾಡ ಬೇಕು ಎಂದು ಸೂಚನೆ ನೀಡಿ, ವಿಚಾರಣೆ ಮುಂದೂಡಿತು.