ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಿರ್ದೇಶಕರ ಹೈಜಾಕ್
Team Udayavani, Aug 30, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನಗೊಳಿಸಿ ಅಧಿಕಾರದ ಗದ್ದುಗೆ ಏರಿರುವ ಬಿಜೆಪಿ ಈಗ ಕೆಎಂಎಫ್ ಅಧ್ಯಕ್ಷರ ಹುದ್ದೆ ಪಡೆಯಲು ಮಂಡಳಿಯ ನಿರ್ದೇಶಕರನ್ನು ಆಪರೇಷನ್ ಕಮಲ ಮಾಡಲು ಮುಂದಾಗಿದೆ. ಆ.31 ರಂದು ಕೆಎಂಎಫ್ ಅಧ್ಯಕ್ಷರ ಹುದ್ದೆಗೆ ಚುನಾವಣೆ ನಡೆಯ ಲಿದ್ದು, ಅಧ್ಯಕ್ಷ ಸ್ಥಾನಕ್ಕಾಗಿ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರದ ವತಿಯಿಂದ ಅವರನ್ನು ನಾಮ ನಿರ್ದೇಶನ ಮಾಡಲಾಗಿದ್ದು, ಚುನಾವಣೆಯಲ್ಲಿ ಗೆಲ್ಲಲು ಅಗತ್ಯ ಇರುವ ನಿರ್ದೇಶಕರನ್ನು ಮುಂಬೈಗೆ ಕರೆದುಕೊಂಡು ಹೋಗಿದ್ದಾ ರೆಂದು ಹೇಳಲಾಗುತ್ತಿದೆ. 16 ಸದಸ್ಯರಿರುವ ಕರ್ನಾಟಕ ಹಾಲು ಮಹಾ ಮಂಡಳದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಜೊತೆ ಗುರುತಿಸಿಕೊಂಡಿದ್ದ 6 ನಿರ್ದೇಶಕರನ್ನು ಮುಂಬೈಗೆ ಕರೆದು ಕೊಂಡು ಹೋಗಲಾಗಿದೆ ಎಂದು ಹೇಳಲಾಗುತ್ತಿದ್ದು,
ಕಾಂಗ್ರೆಸ್ನ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ ಜೊತೆಗಿದ್ದ ಐವರು ನಿರ್ದೇಶಕರು ಬಾಲಚಂದ್ರಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಆ.31 ರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಲು ಬಾಲಚಂದ್ರ ಕಸರತ್ತು ನಡೆಸಿದ್ದಾರೆಂದು ತಿಳಿದು ಬಂದಿದೆ.