ನನಗೂ ಸಚಿವ ಸ್ಥಾನ ಬೇಕು: ಹರ್ಷವರ್ಧನ್
Team Udayavani, Dec 18, 2019, 3:00 AM IST
ಮೈಸೂರು: ಜಿಲ್ಲೆಯ ನಂಜನಗೂಡು ಕ್ಷೇತ್ರದ ಬಿಜೆಪಿ ಶಾಸಕ ಬಿ.ಹರ್ಷವರ್ಧನ್ ಅವರು ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಖುದ್ದಾಗಿ ಮನವಿ ಮಾಡಿದ್ದೇನೆ ಎಂದು ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಸಂಪುಟದಲ್ಲಿ ಶ್ರೀನಿವಾಸಪ್ರಸಾದ್ ಅವರಿಗೆ ಸಚಿವ ಹುದ್ದೆ ನೀಡಲಿಲ್ಲ. ಹೀಗಾಗಿ, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಬಲಗೈ ಜನಾಂಗದಿಂದ ನಾನೂ ಸಚಿವ ಸ್ಥಾನದ ಆಕಾಂಕ್ಷಿ.
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿ.ಶ್ರೀನಿವಾಸ್ ಪ್ರಸಾದ್ ಅವರ ಪ್ರಭಾವ ಅಗಾಧವಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿಯ ಬಾವುಟವನ್ನು ಹಾರಿಸಿದ್ದೇವೆ. ಹೀಗಾಗಿ, ಈ ಲೋಕಸಭಾ ಕ್ಷೇತ್ರ ಮತ್ತು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯಾಗಬೇಕಾದರೆ ಸಚಿವ ಸ್ಥಾನ ಬೇಕು. ಇದು ಕ್ಷೇತ್ರದ ಜನರ ಬಯಕೆ ಕೂಡ ಎಂದು ಪ್ರತಿಪಾದಿಸಿದರು.