ನನ್ನ ಸೋಲಿಗೆ ನಾನೇ ಕಾರಣ: ನಿಖಿಲ್ ಕುಮಾರಸ್ವಾಮಿ
Team Udayavani, May 31, 2019, 3:06 AM IST
ಮಂಡ್ಯ: ಲೋಕಸಭಾ ಚುನಾವಣೆಯ ಸೋಲಿಗೆ ಯಾರನ್ನೂ ಹೊಣೆ ಮಾಡುವುದಿಲ್ಲ. ನನ್ನ ಸೋಲಿಗೆ ನಾನೇ ಕಾರಣ ಎಂದು ನಿಖಿಲ್ ಕುಮಾರಸ್ವಾಮಿ ಪೋಸ್ಟ್ ಮಾಡಿದ್ದಾರೆ.
ಮಂಡ್ಯದಲ್ಲಿ ಫಲಿತಾಂಶ ಹೊರಬಿದ್ದ ಬಳಿಕ ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿರುವ ನಿಖಿಲ್, ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸುಮಲತಾಗೆ ಅಭಿನಂದನೆ ಸಲ್ಲಿಸಿದ್ದಾರೆ. ನನ್ನ ಸೋಲಿಗೆ ಯಾವುದೇ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿ ಯಾರೂ ಹೊಣೆಯಲ್ಲ. ಮಂಡ್ಯದ ಜನತೆ ನಿಖಿಲ್ ಕುಮಾರಸ್ವಾಮಿಯನ್ನು ತಿರಸ್ಕರಿಸಿದ್ದಾರೆ.
ಕಾರ್ಯಕರ್ತರ ನಿರೀಕ್ಷೆಯನ್ನು ಹುಸಿ ಮಾಡಿರುವುದಕ್ಕೆ ಅವರಿಗೆ ಕ್ಷಮೆ ಕೋರುತ್ತೇನೆ. ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಮತ್ತು ಜನರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಜನರ ಕಷ್ಟ-ಸುಖಗಳನ್ನು ಅರಿಯುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಜೊತೆಗೆ, ಅಭಿಷೇಕ್ ಅಂಬರೀಶ್ ಅವರ ಮೊದಲ ಚಿತ್ರ “ಅಮರ್’, ಮೇ 31ರಂದು ಬಿಡುಗಡೆ ಯಾಗಲಿದ್ದು, ಅದಕ್ಕೆ ಶುಭಾಶಯ ಕೋರಿದ್ದಾರೆ. ಅಮರ್ ಚಿತ್ರ ಯಶಸ್ವಿಯಾಗಲಿ, ಎಲ್ಲರೂ ಚಿತ್ರಮಂದಿರಕ್ಕೆ ಹೋಗಿ ಚಿತ್ರ ವೀಕ್ಷಣೆ ಮಾಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅಭಿಷೇಕ್, ಚಿತ್ರಕ್ಕೆ ಶುಭ ಹಾರೈಸಿದ್ದಕ್ಕೆ ನಿಖಿಲ್ಗೆ ಅಭಿನಂದನೆ ಸಲ್ಲಿಸಿದ್ದಾರೆ.