ಈ ಬಾರಿ ಸಚಿವನಾಗುತ್ತೇನೆ: ಜಿ.ಎಚ್. ತಿಪ್ಪಾರೆಡ್ಡಿ ವಿಶ್ವಾಸ
Team Udayavani, Dec 17, 2019, 3:03 AM IST
ಸಿರಿಗೆರೆ: ಸಚಿವ ಸಂಪುಟ ವಿಸ್ತರಣೆ ವೇಳೆ ನಾನು ಮಂತ್ರಿಯಾಗುವ ವಿಶ್ವಾಸವಿದೆ ಎಂದು ಚಿತ್ರದುರ್ಗ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು. ಸಿರಿಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ನಾನು ಆರು ಬಾರಿ ಚಿತ್ರದುರ್ಗ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಹಿರಿಯ ಶಾಸಕನಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಭದ್ರವಾಗಿ ನೆಲೆಯೂರುವಂತೆ ಮಾಡಲು ಜಿಲ್ಲೆಯ ಮುಖಂಡರ ಜತೆಗೆ ಶ್ರಮಿಸಿದ್ದೇನೆ.
ಮುಖ್ಯವಾಗಿ ಕ್ಷೇತ್ರದ ಮತದಾರರ ಅಪೇಕ್ಷೆಯಂತೆ ಜನಪರವಾಗಿ ಕೆಲಸ ಮಾಡಿದ್ದೇನೆ. ಚಿತ್ರದುರ್ಗ ಜಿಲ್ಲೆಗೆ ಮೊದಲಿನಿಂದಲೂ ಹೊರ ಜಿಲ್ಲೆಗಳಿಂದ ಬಂದವರೇ ಉಸ್ತುವಾರಿ ಸಚಿವರಾಗುತ್ತಿದ್ದಾರೆ. ಈ ಬಾರಿಯಾದರೂ ಇದರಿಂದ ಮುಕ್ತಿ ದೊರೆಯಬೇಕಾಗಿದೆ. ನನಗೆ ಸಚಿವ ಸ್ಥಾನ ನೀಡುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದೇನೆ. ಅವರಿಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.