ಅಕ್ರಮ ಹಣ ವರ್ಗಾವಣೆ ಪ್ರಕರಣಮಾಜಿ ಸಚಿವ ಕಟ್ಟಾ ಮತ್ತಿತರ ಅರ್ಜಿ ವಜಾ
Team Udayavani, Dec 20, 2020, 10:11 PM IST
ಬೆಂಗಳೂರು: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಸಹಿತ ಹಲವರ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿರುವ ಹೈಕೋರ್ಟ್, ಈ ಸಂಬಂಧ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.
ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ಸುಬ್ರಮಣ್ಯ ನಾಯ್ಡು, ಅವರ ಪತ್ನಿ ಸೌಭಾಗ್ಯಾ ಸಹಿತ 20ಕ್ಕೂ ಅಧಿಕ ಮಂದಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ| ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.
ಅಲ್ಲದೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಲು ನ್ಯಾಯಪೀಠ ಸ್ಪಷ್ಟವಾಗಿ ನಿರಾಕರಿಸಿದೆ. ಜತೆಗೆ ಪಿಎಂಎಎಲ್ ತಿದ್ದುಪಡಿಗೆ ಮುನ್ನವೇ ತಮ್ಮ ಆಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿಗೊಳಿಸಲಾಗಿತ್ತು, ಅದು ಕಾನೂನುಬದ್ಧವಲ್ಲ ಎಂಬ ಅರ್ಜಿದಾರರ ವಾದವನ್ನೂ ನ್ಯಾಯಾಲಯ ತಳ್ಳಿಹಾಕಿದೆ.