ವಿಷ್ಣು ಸ್ಮಾರಕ ನಿರ್ಮಾಣ ಕಾಮಗಾರಿಗೆ ಚಾಲನೆ
Team Udayavani, Jul 2, 2019, 3:03 AM IST
ಮೈಸೂರು: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ನಟ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕಾಮಗಾರಿಯನ್ನು ಪೊಲೀಸ್ ಭದ್ರತೆಯಲ್ಲಿ ಕೈಗೊಳ್ಳಲಾಗಿದೆ.
ಮೈಸೂರಿನ ಎಚ್.ಡಿ.ಕೋಟೆ ರಸ್ತೆಯಲ್ಲಿರುವ ಹಾಲಾಳು ಗ್ರಾಮದಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸರ್ಕಾರ 5 ಎಕರೆ ಜಮೀನು ಮಂಜೂರು ಮಾಡಿತ್ತು. ಆದರೆ, ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ರೈತರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದರಿಂದಾಗಿ ಸ್ಮಾರಕ ನಿರ್ಮಾಣ ನನೆಗುದಿಗೆ ಬಿದ್ದಿತ್ತು.
ಆದರೆ, ಆ ರೈತರ ಹೆಸರಿಗೆ ಜಮೀನಿನ ಖಾತೆ ಆಗದಿರುವ ಹಿನ್ನೆಲೆಯಲ್ಲಿ ಕೋರ್ಟ್, ಸ್ಮಾರಕ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ್ದರಿಂದ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ಅನಿರುದ್ಧ ಅವರು ಸೋಮವಾರ ಸ್ಮಾರಕ ನಿರ್ಮಾಣ ಜಾಗದಲ್ಲಿ ಪೂಜೆ ನೆರವೇರಿಸಿದರು.