ಶಾಲಾ ಶಿಕ್ಷಕರ ಭಡ್ತಿ ಪ್ರಕ್ರಿಯೆ ವಾರದೊಳಗೆ ಪೂರ್ಣಗೊಳಿಸಲು ಸೂಚನೆ
Team Udayavani, Sep 9, 2020, 5:52 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪ್ರೌಢಶಾಲಾ ಶಿಕ್ಷಕರಾಗಿ ಭಡ್ತಿ ನೀಡುವ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಪದೋನ್ನತಿ ನೀಡಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಈ ಭಡ್ತಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಪ್ರಸ್ತುತ ಭಡ್ತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವುದರಿಂದ ಕೆಲವು ಜಿಲ್ಲೆಗಳ ಶಿಕ್ಷಕರಿಗೆ ತೊಂದರೆ ಆಗಿರುವ ಬಗ್ಗೆ ಶಿಕ್ಷಕರು ಮನವಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ತಡೆ ಹಿಡಿದಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಪದೋನ್ನತಿ ಪ್ರಕ್ರಿಯೆಗೆ ಅನುಮತಿ ನೀಡಬೇಕು. ಭಡ್ತಿ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು ಎಂದು ಇಲಾಖೆಯ ಆಯುಕ್ತ ಡಾ| ಕೆ.ಜೆ.ಜಗದೀಶ್
ಅವರಿಗೆ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಸಿದ್ಧತೆ
ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸುವ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ವರ್ಗಾವಣೆ ಕಾಯ್ದೆಗೆ ಈಗಾಗಲೇ ರಾಜ್ಯಪಾಲರ ಅಂಕಿತವೂ ದೊರೆತಿದ್ದು, ವರ್ಗಾವಣೆ ಕರಡು ನಿಯಮಕ್ಕೆ ಆಕ್ಷೇಪಣೆಗಳನ್ನು ಆಹ್ವಾನಿಸಿದ ಬಳಿಕ ವೇಳಾಪಟ್ಟಿ ಪ್ರಕಟವಾಗಲಿದೆ.
ವೇಳಾಪಟ್ಟಿಯಂತೆ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್ಲೈನ್ ಮೂಲಕವೇ ನಡೆಯಲಿದೆ. ಕೌನ್ಸೆಲಿಂಗ್ ಹಾಗೂ ಸ್ಥಳ ನಿಯೋಜನೆ ಸಂಬಂಧವೂ ಆದೇಶ ಹೊರಡಿಸಲಿದೆ. ವರ್ಗಾವಣೆ ನಡೆಸಲು ಬೇಕಾದ ಎಲ್ಲ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿ ಕೊಳ್ಳಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.