ಮಧ್ಯಮಾವಧಿ, ದೀರ್ಘಾವಧಿ ಸಾಲಗಳ ಮೇಲಿನ ಬಡ್ಡಿ ಮನ್ನಾ
Team Udayavani, Feb 16, 2020, 3:03 AM IST
ಬೆಂಗಳೂರು: ರಾಜ್ಯದ ಸಹಕಾರ ಸಂಸ್ಥೆಗಳ ಮೂಲಕ ಸಾಲ ಪಡೆದು 2020ರ ಮಾರ್ಚ್ 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡುವ ಬಗ್ಗೆ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹುಬ್ಬಳ್ಳಿಯಲ್ಲಿ ಈ ಕುರಿತು ಘೋಷಣೆ ಮಾಡಿದ್ದರು. ಶನಿವಾರ ಅಧಿಕೃತ ಆದೇಶ ಹೊರಡಿಸಲಾಗಿದೆ.
ರಾಜ್ಯದ 22 ಜಿಲ್ಲೆಗಳಲ್ಲಿನ 103 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಿಸಿದ್ದು, ಶೇ.33 ರಿಂದ 50ರಷ್ಟು ಹಾಗೂ ಅದಕ್ಕಿಂತ ಹೆಚ್ಚಾಗಿ ಬೆಳೆ ನಾಶ ಆಗಿದೆ. ಹೀಗಾಗಿ, ರೈತರು ಸಹಕಾರ ಸಂಸ್ಥೆಗಳಿಂದ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ಪಡೆದು ಸಾಲ ಮರು ಪಾವತಿಸಲು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇದನ್ನು ಮನಗಂಡು ಸುಸ್ತಿದಾರರಾದ ರೈತರನ್ನು ಋಣಮುಕ್ತರನ್ನಾಗಿ ಮಾಡಿ, ಮುಂದಿನ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕಿದೆ.
ಹೀಗಾಗಿ, 2020ರ ಮಾರ್ಚ್ 31ರ ಅಂತ್ಯಕ್ಕೆ 92,525 ರೈತರಿಂದ ಅಂದಾಜು 560 ಕೋಟಿ ರೂ.ಕೃಷಿ ಸಾಲ ಸುಸ್ತಿಯಾಗಿದ್ದು, ಇದರ ಮೇಲಿನ ಬಡ್ಡಿ ಅಂದಾಜು 460 ಕೋಟಿ ರೂ.ಆಗಿದೆ. ಮಾರ್ಚ್ ಅಂತ್ಯದೊಳಗೆ ಸಾಲ ಮರುಪಾವತಿಸಿದರೆ ಅದರ ಮೇಲಿನ ಬಡ್ಡಿಯನ್ನು ಸರ್ಕಾರ ಭರಿಸಲಿದೆ ಎಂದು ಆದೇಶ ಹೊರಡಿಸಲಾಗಿದೆ.