ಕೇಂದ್ರದಿಂದ ಐಟಿ ಇಲಾಖೆ ದುರ್ಬಳಕೆ: ಹೊರಟ್ಟಿ
Team Udayavani, Mar 29, 2019, 11:47 AM IST
ಹುಬ್ಬಳ್ಳಿ: ಜೆಡಿಎಸ್ ನಾಯಕರ ನಿವಾಸ, ಕಚೇರಿಗಳ ಮೇಲಿನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಚುನಾವಣೆ ಸಂದರ್ಭದಲ್ಲಿ ಪಕ್ಷದ ಮುಖಂಡರನ್ನು ಕಟ್ಟಿ ಹಾಕುವ ತಂತ್ರಗಾರಿಕೆ ಕೇಂದ್ರದಿಂದ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚೆಗೆ ಐಟಿ ದಾಳಿ ಫ್ಯಾಷನ್ ಆಗಿದೆ. ರಾಜಕೀಯ ವಿರೋಧಿಗಳನ್ನು ಮಣಿಸಲು ಕೇಂದ್ರ ಸರ್ಕಾರ ಈ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಜಗಜ್ಜಾಹೀರಾಗಿದೆ. ಇದು ಕಲುಷಿತ ರಾಜಕಾರಣದ ಪರಮಾವಧಿ. ಬಿಜೆಪಿ ನಾಯಕರ ಆಣತಿಯಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ ಎಂದರು.